ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ : ಯಶ್ ಪಾಲ್ ಸುವರ್ಣ -Vishwanews24
ಉಡುಪಿ :ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಆಗಸ್ಟ್ 5 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಂದ ಶಿಲಾನ್ಯಾಸ ಗೊಳ್ಳುವ ಮೂಲಕ ಸಾಕಾರವಾಗುತ್ತಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಲಕ್ಷಾಂತರ ಕರಸೇವಕರ ತ್ಯಾಗ ಬಲಿದಾನದೊಂದಿಗೆ, ಶ್ರೀ ಆಟಲ್ ಬಿಹಾರಿ ವಾಜಪೇಯಿ,ಲಾಲ್ ಕೃಷ್ಣ ಅಡ್ವಾಣಿ, ಪೇಜಾವರ ಮಠದ ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಾಲ್, ಉಮಾ ಭಾರತಿ, ಮುರಳಿ ಮನೋಹರ ಜೋಶಿ, ಮೊದಲಾದ ಹಲವಾರು ನಾಯಕರ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ಭಾರತೀಯರ ಸ್ವಾಭಿಮಾನದ ಪ್ರತೀಕವಾಗಿ ರಾಮ ಮಂದಿರದ ನಿರ್ಮಾಣ ಸಾಕಾರಗೊಳ್ಳುತ್ತಿದೆ.
ನಮ್ಮ ಜೀವಿತಾವಧಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶ್ರೀರಾಮ ಮಂದಿರದ ಶಿಲಾನ್ಯಾಸ ಸಮಾರಂಭದ ಸಂಭ್ರಮವನ್ನು ಮನೆ ಮನಗಳಲ್ಲಿ ಆಚರಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಭಗವಧ್ವಜ ಹಾರಿಸಿ, ದೀಪವನ್ನು ಬೆಳಗುವ ಮೂಲಕ ಸ್ಮರಣಿಯವಾಗಿಸುವಂತೆ ಜನತೆಯಲ್ಲಿ ಮನವಿ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
