ಈ ಬಾರಿಯ ಗಣೇಶ ಹಬ್ಬಕ್ಜೆ ಬಂತು ರಾಜ್ಯ ಸರ್ಕಾರದ ಸುತ್ತೋಲೆ – ಹೇಗಿದೆ ಗೊತ್ತಾ….!? Vishwanews24
ಬೆಂಗಳೂರು: ಕೋವಿಡ್ 19 ಸೋಂಕು ಈ ವರ್ಷ ಬಹುತೇಕ ಎಲ್ಲಾ ಹಬ್ಬದ ಸಂಭ್ರಮಗಳನ್ನು ಕಳೆಗುಂದಿಸಿದೆ.
ಇದಕ್ಕೆ ಇನ್ನೊಂದು ಸೇರ್ಪಡೆಯಾಗಿ ನಾಡಿನಾದ್ಯಂತ ಸಂಭ್ರಮೋಲ್ಲಾಸಗಳಿಂದ ಆಚರಿಸಲ್ಪಡುತ್ತಿದ್ದ ಗಣೇಶೋತ್ಸವ ಆಚರಣೆಯ ಮೇಲೂ ಕೋವಿಡ್ 10 ಸೋಂಕಿನ ಕರಿನೆರಳು ಬಿದ್ದಿದೆ.
ಸಾರ್ವಜನಿಕವಾಗಿ ಗಣೇಶೋತ್ಸವಗಳನ್ನು ಆಚರಣೆ ಮಾಡದಂತೆ ರಾಜ್ಯ ಸರಕಾರವು ಇದೀಗ ಆದೇಶ ಹೊರಡಿಸಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅದು ಪ್ರಕಟಿಸಿದೆ.
ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದ ರಾಜ್ಯ ಸರಕಾರದ ಮಾರ್ಗಸೂಚಿಗಳು ಹೀಗಿವೆ:
ಈ ಬಾರಿ ಚೌತಿ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳ ಒಳಗೆ ಮತ್ತು ಮನೆಗಳಲ್ಲಿ ಮಾತ್ರವೇ ಆಚರಿಸುವುದು.ಸಾರ್ವಜನಿಕ ಸ್ಥಳಗಳಲ್ಲಿ (ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತಿಲ್ಲ.
ಗಣಪತಿ ವಿಗ್ರಹವನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೊಳ, ಕೆರೆ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜಿಸುವಂತಿಲ್ಲ.
ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತರುವ ಸಂದರ್ಭದಲ್ಲಿ ಹಾಗೂ ವಿಸರ್ಜನೆಯ ಸಂದರ್ಭದಲ್ಲಿ ಮೆರವಣಿಗೆ ನಡೆಸುವುದಕ್ಕೆ ಕಟ್ಟುನಿಟ್ಟಿನ ನಿರ್ಬಂಧವಿರಲಿದೆ.
ಜನರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ವಿಗ್ರಹಗಳನ್ನು ತಮ್ಮ ಮನೆಯ ಆವರಣದಲ್ಲೇ ವಿಸರ್ಜಿಸಬೇಕು.
ಗಣೇಶ ಹಬ್ಬವನ್ನು ಆಚರಿಸುವ ದೇವಸ್ಥಾನಗಳಲ್ಲಿ ಪ್ರತೀ ನಿತ್ಯ ಸ್ಯಾನಿಟೈಸೇಷನ್ ಮಾಡವುದು ಕಡ್ಡಾಯವಾಗಿರುತ್ತದೆ. ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ನಡೆಸುವುದು ಕಡ್ಡಾಯವಾಗಿರುತ್ತದೆ. ದರ್ಶನ ಸರತಿಯಲ್ಲಿ ಭಕ್ತಾದಿಗಳು ಕನಿಷ್ಟ 06 ಅಡಿ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
ಈ ಸಂದರ್ಭದಲ್ಲಿ ಕೋವಿಡ್ 19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿ ಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೇ ಇಲಾಖೆಗಳಿಂದ ಹೊರಡಿಸಲಾಗುವ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿರುತ್ತದೆ.
