ಉಡುಪಿ : ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಿ : ಡಾ.ನಾಗಭೂಷಣ ಉಡುಪ -Vishwanews24
ಉಡುಪಿ : ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಿ : ಡಾ.ನಾಗಭೂಷಣ ಉಡುಪ -Vishwanews24
ಉಡುಪಿ : ಇಂದಿನ ಯುವಜನತೆ ಆರೋಗ್ಯದ ಮಹತ್ವ ಮರೆತು ದುಶ್ಚಟಗಳಿಗೆ ಬಲಿಯಾಗಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳುತ್ತಿದ್ದಾರೆ. ಸಾಂಕ್ರಮಿಕ ಕಾಯಿಲೆಯಷ್ಟೇ ಮಾರಕವಾಗಿರುವ ವಿವಿಧ ವ್ಯಸನಗಳ ಬಗ್ಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು.
ಅವರು ಇಂದು ಮಲ್ಪೆಯ ಮೀನುಗಾರರ ಸಂಘದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಮೀನುಗಾರರಿಗೆ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ಸಾಂಕ್ರಾಮಿಕ ರೋಗಗಳು ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಹೊಂದಿರಬೇಕು. ಮೀನುಗಾರರು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು, ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ ಮಾತನಾಡಿ , ಮೀನುಗಾರರು ತಮ್ಮ ದೈನಂದಿನ ಕೆಲಸದ ಒತ್ತಡದಲ್ಲಿಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ, ಮಲ್ಪೆಯನ್ನು ಮಲೇರಿಯಾ, ಡೆಂಗ್ಯೂ, ಕಾಲರಾ ಹಾಗೂ ಇನ್ನಿತರ ಸಾಂಕ್ರಾಮಿಕ ಖಾಯಿಲೆಗಳಿಂದ ಹಾಗೂ ತಂಬಾಕು ಮುಕ್ತ ಮಲ್ಪೆಯನ್ನಾಗಿ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಗಣೇಶ್, ಸಹಾಯಕ ನಿರ್ದೇಶಕಿ ಸುಷ್ಮಾ, ಮಣಿಪಾಲನ ಕೆ.ಎಮ್.ಸಿ ವೈದ್ಯ ಡಾ.ಮುರುಳಿಧರ್ ಕುಲಕರ್ಣಿ, ಜಿಲ್ಲಾ ಮಲೇರಿಯಾಧಿಕಾರಿ ಡಾ. ಪ್ರಶಾಂತ ಭಟ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮರಾವ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿದರು, ಮನೋಜ್ಕುಮಾರ್ ನಿರೂಪಿಸಿ ವಂದಿಸಿದರು.
