ಉಡುಪಿ: ಶೀಘ್ರವೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ – Vishwanews24
ಉಡುಪಿ: ಶೀಘ್ರವೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ
ಉಡುಪಿ: ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಶೀಘ್ರವೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಶಾಕ್ ಎದುರಾಗಿದೆ.
ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿಯವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುಕುಮಾರ್ ಶೆಟ್ಟಿ, ಬಿಜೆಪಿ ಪಕ್ಷ ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಅದರಂತೆ ನನಗೆ ಸೀಟು ಕೊಡದೆ ಅನ್ಯಾಯ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಬಹಳಷ್ಟು ನೋವಾಗಿದೆ ಎಂದರು.
ಕೆಲವು ನಾಯಕರು ತನ್ನನ್ನ ಕಾಂಗ್ರೆಸ್ ಸೇರಲು ಹೇಳುತ್ತಿದ್ದರು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹಿನ್ನೆಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ.ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆಶಿ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
