ಎಸ್.ಸಿ ಮತ್ತು ಎಸ್.ಟಿ ನೌಕರರ ಬಡ್ತಿಗೆ ಶಾಶ್ವತ ಸಮಿತಿ ರಚಿಸಿ : ಸಿದ್ದರಾಮಯ್ಯ -Vishwanews24
ಎಸ್.ಸಿ ಮತ್ತು ಎಸ್.ಟಿ ನೌಕರರ ಬಡ್ತಿಗೆ ಶಾಶ್ವತ ಸಮಿತಿ ರಚಿಸಿ : ಸಿದ್ದರಾಮಯ್ಯ -Vishwanews24
ಬೆಂಗಳೂರು: ‘ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್.ಟಿ) ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಹಾಗೂ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸಬೇಕು’ ಎಂದು ಆಗ್ರಹಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಪರಿಶಿಷ್ಟ ಜಾತಿ ಪತ್ತು ಪಂಗಡದ ನೌಕರರ ಸಂಘದ ಪದಾಧಿಕಾರಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು. ‘ಅನ್ಯಾಯಕ್ಕೆ ಒಳಗಾಗಿರುವ ನೌಕರರ ಹಿತ ಕಾಪಾಡಬೇಕು’ ಎಂದೂ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
‘ಎಸ್.ಸಿ, ಎಸ್.ಟಿ ಸರ್ಕಾರಿ ನೌಕರರ ಬಡ್ತಿ ವಿಚಾರವು ಅನೇಕ ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನತೆಗಳಿಂದಾಗಿ ನ್ಯಾಯಾಲಯಗಳು ಕೂಡಾ ಈ ಸಮಸ್ಯೆಯನ್ನು ಪರಿಹರಿಸಲು ಹಲವು ವರ್ಷಗಳನ್ನು ತೆಗೆದುಕೊಂಡಿದ್ದವು. ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಈ ವರ್ಗಗಳ 15 ಕ್ಕೂ ಹೆಚ್ಚು ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು’.
‘ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017ರಲ್ಲಿ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆ’ ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು. ಸುಪ್ರೀಂ ಕೋರ್ಟ್ ಕೂಡಾ ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ, ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಈ ಸಮುದಾಯಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ’ ಎಂದೂ ಪತ್ರದಲ್ಲಿ ದೂರಿದ್ದಾರೆ.
