ಒಬ್ಬ ಚಾಯ್‍ವಾಲಾ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಉಳಿಸಿಕೊಂಡು ಬಂದಿದೆ: ಮಲ್ಲಿಕಾರ್ಜುನ್ ಖರ್ಗೆ

Featured, ರಾಷ್ಟ್ರ ನ್ಯೂಸ್

ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್‍ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಉಸ್ತುವಾರಿಯನ್ನು ವಹಿಸಿಕೊಂಡಿರುವ ಮಲ್ಲಿಕಾರ್ಜುನ್ ಖರ್ಗೆ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೋದಿಯವರು 43 ವರ್ಷಗಳ ಹಿಂದಿನ ದೇಶದ ತುರ್ತು ಪರಿಸ್ಥಿತಿಯ ಬಗ್ಗೆ ಪದೇ ಪದೇ ಮಾತನಾಡುತ್ತಾರೆ. ಆದರೆ ಕಳೆದ 4 ವರ್ಷಗಳಿಂದ ದೇಶದಲ್ಲಿನ ಅಘೋಷಿಯ ತುರ್ತು ಪರಿಸ್ಥಿತಿಯ ಬಗ್ಗೆ ಏಕೆ ಮಾತನಾಡಲ್ಲ ಎಂದು ಪ್ರಶ್ನೆ ಮಾಡಿದರು.

ರೈತ ಬಾಂಧವರಿಗೆ ಕೇಂದ್ರ ಜಾರಿಗೆ ತಂದಿರುವ ಯೋಜನೆಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆಯ ಸಂಖ್ಯೆಯೂ ಹೆಚ್ಚುತ್ತಿದೆ. ರೈತರಿಗೆ ಹೊಸ ಸಾಲಗಳು ಸಿಗುತ್ತಿಲ್ಲ. ಮಾರುಕಟ್ಟೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗದಂತಾಗಿದೆ ಎಂದರು.