ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸಿ : ಆರ್.ವಿ.ದೇಶಪಾಂಡೆ -Vishwanews24
ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟ, ಪರಿಹಾರ ಮನೆಗಳ ಪ್ರಗತಿ ಮತ್ತಿತರ ಬಗ್ಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.
ಜುಲೈ, 31 ರೊಳಗೆ ಕರ್ಣಂಗೇರಿ ಮನೆಗಳನ್ನು ಹಸ್ತಾಂತರಿಸಬೇಕು. ಹಾಗೆಯೇ ಆಗಸ್ಟ್, 15 ರೊಳಗೆ ಮದೆನಾಡು ಗ್ರಾಮದ ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಹಸ್ತಾಂತರಿಸಬೇಕು. ಉಳಿದಂತೆ ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸುವಂತೆ ಆರ್.ವಿ.ದೇಶಪಾಂಡೆ ಅವರು ನಿರ್ದೇಶನ ನೀಡಿದರು.
ಹಾಗೆಯೇ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗೆ ಮನೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಹರಿಗೆ ಮನೆ ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಕಳೆದ ವರ್ಷದ ಪ್ರಕೃತಿ ವಿಕೋಪದಿಂದಾಗಿ 431 ಮನೆಗಳು ಪೂರ್ಣ ಹಾನಿಯಾಗಿದೆ. 405 ಮನೆಗಳು ಭಾಗಶಃ ಹಾನಿಯಾಗಿದ್ದು, ಒಟ್ಟು 770 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿ 431 ಮನೆಗಳನ್ನು ಪ್ರಥಮ ಹಂತದಲ್ಲಿ ನಿರ್ಮಿಸಲಾಗುತ್ತಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಮಾತನಾಡಿದ ಕಂದಾಯ ಸಚಿವರು ಸಂಪಾಜೆ ಮತ್ತು ಗಾಳಿಬೀಡುವಿನಲ್ಲಿ ಶೀಘ್ರವೇ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.
