ಕಾಪು: ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವಿಜಯಾ ಬ್ಯಾಂಕ್‌ ನಿವೃತ್ತ ಸಿಬಂದಿ, ಬಿಜೆಪಿ ಮುಖಂಡ ಸಾವು – vishwanews24

Featured, ಉಡುಪಿ

ಕಾಪು: ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವಿಜಯಾ ಬ್ಯಾಂಕ್‌ ನಿವೃತ್ತ ಸಿಬಂದಿ, ಬಿಜೆಪಿ ಮುಖಂಡ ಸಾವು

ಕಾಪು: ಸ್ಕೂಟಿಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವಿಜಯಾ ಬ್ಯಾಂಕ್‌ ನಿವೃತ್ತ ಸಿಬಂದಿ, ಬಿಜೆಪಿ ಮುಖಂಡ ಗೋಪ ಪೂಜಾರಿ (68) ಅವರು ಚಿಕಿತ್ಸೆ ಫಲಕಾರಿಯಾಗದೆ ನ. 13ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅ. 26ರಂದು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಮಂಗಳೂರು ರಸ್ತೆಯಲ್ಲಿ ಕಾಪುವಿಗೆ ಆಗಮಿಸುತ್ತಿದ್ದ ಗೋಪ ಪೂಜಾರಿ ಅವರ ಸ್ಕೂಟಿಗೆ ಕಟಪಾಡಿ ಮೂಡುಬೆಟ್ಟು ಬಳಿ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.

ಸ್ಥಳೀಯರು ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯು ವಿಭಾಗದಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ಅವರು ನ. 13ರಂದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಪಘಾತಕ್ಕೆ ಕಾರಣವಾಗಿ ಸ್ಥಳದಿಂದ ಪರಾರಿಯಾಗಿದ್ದ ಕಾರನ್ನು ಪೊಲೀಸರು ಬ್ರಹ್ಮಾವರದಲ್ಲಿ ಪತ್ತೆ ಹಚ್ಚಿದ್ದು, ಕಾರು ಮತ್ತು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದರು.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅವರು ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಸಹಕಾರಿ ಪ್ರಕೋಷ್ಟದ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದು, ಬಿಜೆಪಿ ಕಾಪು ಶಕ್ತಿ ಕೇಂದ್ರದ ಪ್ರಮುಖ್‌ ಆಗಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಅನೇಕ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ಸಾಮಾಜಿಕ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು.

ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ವಿ.ಪ. ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಕ್ಷೇತ್ರಾಧ್ಯಕ್ಷ ಶ್ರೀಕಾಂತ್‌ ನಾಯಕ್‌ ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

Leave a Reply