ಕುಂದಾಪುರ: ಸಾವಿರಾರು ಜನರೊಂದಿಗೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆ
ಅವರು ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಾ, ಚುನಾವಣಾ ಪೂರ್ವದಲ್ಲಿ ನಡೆದಂತಹ ಎಲ್ಲಾ ಸಮೀಕ್ಷೆಗಳು ಬಿಜೆಪಿ ವಿರುದ್ಧವಾಗಿದೆ. ಆದರೂ ರಾಜ್ಯದಲ್ಲಿ ನಾವೇ ಅಧಿಕಾರಿ ಹಿಡಿಯುತ್ತೇವೆ ಎಂಬ ಭ್ರಮಾಲೋಕದಲ್ಲಿ ಬಿಜೆಪಿ ನಾಯಕರಿದ್ದಾರೆ ಎಂದು ಐವನ್ ಹೇಳಿದರು.
ನಾಲ್ಕು ಬಾರಿ ಕುಂದಾಪುರದಿಂದ ಆಯ್ಕೆಯಾದ ಶಾಸಕರು ತನ್ನ ಜವಾಬ್ದಾರಿ ನಿಭಾಯಿಸಲು ವಿಫಲರಾಗಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು ತಮ್ಮ-ತಮ್ಮ ಕ್ಷೇತ್ರಕ್ಕೆ ಕಳೆದ ಐದು ವರ್ಷಗಳಲ್ಲಿ ಕೋಟ್ಯಾಂತರ ರೂ. ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ.
ಆದರೆ ಕುಂದಾಪುರ ಶಾಸಕರು ಮನೆಯಲ್ಲಿ ಕೂತು ಕಾಲಹರಣ ಮಾಡಿದ್ದು ಬಿಟ್ಟರೆ ಬೇರೇನು ಅಭಿವೃದ್ಧಿ ಮಾಡಿಲ್ಲ ಎಂದು ಅವರು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ವಿರುದ್ದ ಆರೋಪ ಸುರಿಮಳೆ ಸುರಿಸಿದರು.
ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಮಾತನಾಡಿ, ಕುಂದಾಪುರ ಕ್ಷೇತ್ರದ ಅಭಿವೃದ್ಧಿ ನನ್ನ ಕನಸಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಈ ಬಾರಿ ಮತದಾರರು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ್ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಎಐಸಿಸಿ ಸದಸ್ಯ, ಯುವ ನಾಯಕ ಅಮೃತ್ ಶೆಣೈ, ನಗರಾಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ಚುನಾವಣೆ ಉಸ್ತುವಾರಿ ಜಿ.ಎ.ಬಾವಾ, ಕುಂದಾಪುರ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮೀನುಗಾರಿಕಾ ನಿಗಮ ಮಾಜಿ ಅಧ್ಯಕ್ಷ ಹಿರಿಯಣ್ಣ, ಮಂಜುನಾಥ ಭಂಡಾರಿ, ರೋಶನಿ ಒಲಿವೇರಾ, ಮಾಜಿ ಪುರಸಭಾ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮಾಜಿ ಜಿಪಂ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ವಿನೋದ್ ಕ್ರಾಸ್ತಾ, ನಾರಾಯಣ ಆಚಾರ್, ಪುರಸಭೆ ಸದಸ್ಯರು, ಜಿ.ಪಂ, ತಾ.ಪಂ ಸದಸ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.
ಸಭೆಯ ಬಳಿಕ ರಾಕೇಶ್ ಮಲ್ಲಿ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ಸಹಾಯಕ ಆಯುಕ್ತ, ಚುನಾವಣಾಧಿಕಾರಿ ಭೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.



