ಚಿತ್ರದುರ್ಗ: ಹಿರಿಯೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು – Vishwanews24
ಚಿತ್ರದುರ್ಗ: ಹಿರಿಯೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು – Vishwanews24
ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ನಡೆದಿದೆ.
ಬೆಳಗ್ಗಿನ ಜಾವ 5 ಗಂಟೆ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಶಾಂತ್ ಹಟ್ಟಿ (36) ಸಾವನ್ನಪ್ಪಿದವರು. ಮೃತರೆಲ್ಲರೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈರುಳ್ಳಿ ತುಂಬಿಕೊಂಡು ಬೆಂಗಳೂರಿಗೆ ಹೊರಟಿದ್ದ ಈಚರ್ ಲಾರಿಯೊಂದರ ಟೈರ್ ಸಿಡಿದು ಪಲ್ಟಿಯಾಗಿದೆ. ಆಗ ಲಾರಿಯ ಹಿಂಬದಿ ಬರುತ್ತಿದ್ದ ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡು ಹಿರಿಯೂರು ತಾಲೂಕು ಆಸ್ಪತ್ರೆ ಸೇರಿದ್ದಾರೆ.
ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿದ್ದು, ರೈತರು ಕಷ್ಟಪಟ್ಟು ಬೆಳೆದ ಈರುಳ್ಳಿಯೆಲ್ಲಾ ರಸ್ತೆ ಪಾಲಾಗಿವೆ. ಒಂದರ ಹಿಂದೆ ಒಂದು ಲಾರಿ ಡಿಕ್ಕಿಯಾಗಿ ಎರಡು ಲಾರಿಗಳು ಹಾಗೂ ಕಾರು ಪಲ್ಟಿಯಾಗಿವೆ. ಆದರೆ ಆ ವಾಹನಗಳಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಭೀಕರ ಅಪಘಾತದ ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಕೆಲಕಾಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.
