ಜೆಡಿಎಸ್ ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ ಪ್ರಮೋದ್ ಮಧ್ವರಾಜ್ -Vishwanews24
ಉಡುಪಿ: ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜೀ ಸಚಿವ ಪ್ರಮೋದ್ ಮಧ್ವರಾಜ್ ಅವರು ಇದೀಗ ಜೆಡಿಎಸ್ ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಬರೆದಿದ್ದು‘ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಾನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದೆ, ಈ ವಿಷಯವನ್ನು ನಾನು ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿಯೂ ಚರ್ಚಿಸಿದ್ದೆ. ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಉಡುಪಿ – ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದರಿಂದ ನಾನು ಮೈತ್ರಿಪಕ್ಷಗಳ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಬೇಕಾಯಿತು. ಆ ಸಂದರ್ಭ ಜೆಡಿಎಸ್ ನೀಡಿದ್ದ ‘ಬಿ’ ಫಾರಂನಲ್ಲಿ ಪಕ್ಷದ ಸದಸ್ಯನೆಂದು ನಮೂದಿಸಲ್ಪಟ್ಟಿತ್ತು. ಇದೀಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಇಲ್ಲದಿರುವುದರಿಂದ ನಾನು ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.’ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಪದಾಧಿಕಾರಿಗಳು ನನಗೆ ಲೋಕಸಭಾ ಚುನಾವಣೆಯ ಸಂದರ್ಭ ಸಂಪೂರ್ಣ ಬೆಂಬಲ ನೀಡಿದ್ದರು.
ಪ್ರಮೋದ್ ಮಧ್ವರಾಜ್ ಅವರ ಜೆಡಿಎಸ್ ರಾಜೀನಾಮೆಗೆ ಕಳೆದ ಶನಿವಾರ ನಡೆದ ಹರ್ಷ ಮೊಯಿಲಿ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಅಮೀನ್ ನಡುವೆ ನಡೆದ ಕಿತ್ತಾಟ ಕಾರಣವಾಗಿದೆ.
