ಡಿಕೆಶಿ ಜಾಮೀನು ರದ್ದು ಕೋರಿ ಇಡಿ ಸಲ್ಲಿಸಿದ್ದಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ -Vishwanews24
ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ. ಇತ್ತ ಕರ್ನಾಟಕ ಹೈಕೋರ್ಟ್ ನ್ಯಾ. ಅರವಿಂದ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಆಗುವರೆಗೂ ಹೊಸ ಸಮನ್ಸ್ ನೀಡುವಂತಿಲ್ಲ ಎಂದು ಇಡಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ದೆಹಲಿ ಹೈಕೋರ್ಟ್ ಆದೇಶವನ್ನು ನ್ಯಾ. ರೋಹಿಂಗ್ಟನ್ ನಾರಿಮನ್ ಪೀಠ ಎತ್ತಿ ಹಿಡಿದಿದೆ. ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್, ನೀವು ದೇಶದ ನಾಗರಿಕರೊಂದಿಗೆ ವ್ಯವಹರಿಸುವ ವಿಧಾನ ಇದಲ್ಲ ಎಂದು ಹೇಳಿದೆ.
ಇಡಿ ಮೇಲ್ಮನವಿ ಪ್ರಕರಣದಲ್ಲಿ ಡಿಕೆಶಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದ ಸರ್ವೋಚ್ಛ ನ್ಯಾಯಾಲಯ, ನಾವು ಡಿಕೆಶಿಗೆ ಯಾವುದೇ ನೋಟಿಸ್ ನೀಡಿಲ್ಲ. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾ. ರೋಹಿಂಗ್ಟನ್ ನಾರಿಮನ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಸ್ಪಷ್ಟನೆ ನೀಡಿದೆ.
