“ಡಿಜಿಟಲ್ ಇಂಡಿಯಾ” ಎಂಬುದು ಈಗ ಕೇವಲ ಸರ್ಕಾರದ ಅಭಿಯಾನವಲ್ಲ, ನಮ್ಮ ಜೀವನದ ಭಾಗವಾಗಿ ಬದಲಾಗಿದೆ’ – ಪ್ರಧಾನಿ ಮೋದಿ -Vishwanews24
ಬೆಂಗಳೂರು: ಭಾರತದಲ್ಲಿ ಅಭಿವೃದ್ಧಿಪಡಿಸಲಾದ ತಂತ್ರಜ್ಞಾನ ಪರಿಹಾರಗಳನ್ನು ಜಗತ್ತಿನ ಬೇರೆ ದೇಶಗಳಿಗೆ ತಲುಪಿಸಲು ಇದು ಸೂಕ್ತ ಸಮಯವಾಗಿದೆ “ಡಿಜಿಟಲ್ ಇಂಡಿಯಾ” ಎಂಬುದು ಈಗ ಕೇವಲ ಸರ್ಕಾರದ ಅಭಿಯಾನವಾಗಿ ಉಳಿದಿಲ್ಲ. ಇದು ಬದುಕಿನ ರೀತಿಯೇ ಆಗಿ ಹೋಗಿದೆ. ಡಿಜಿಟಲ್ ತಂತ್ರಜ್ಞಾನವು ಜನರಿಗೆ ಪಾರದರ್ಶಕ ರೀತಿಯಲ್ಲಿ ತ್ವರಿತವಾಗಿ ಸೇವೆಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತಿದೆ. ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ, ನಿರ್ಲಕ್ಷಿತ ಸಮುದಾಯಗಳಿಗೆ ಹಾಗೂ ಸರ್ಕಾರಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಇದಕ್ಕಾಗಿ ನಾವು “ಡಿಜಿಟಲ್ ಇಂಡಿಯಾ”ಗೆ ಧನ್ಯವಾದ ಸಲ್ಲಿಸಬೇಕು ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.
ಇದೇ ಮೊತ್ತಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಮೇಳ” (ಬಿಟಿಎಸ್-2020)ವನ್ನು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರವು ಡಿಜಿಟಲ್ ಮತ್ತು ತಾಂತ್ರಿಕ ಪರಿಹಾರಗಳಿಗೆ ಮಾರುಕಟ್ಟೆ ಸೃಷ್ಟಿಸುತ್ತಿರುವುದರ ಜೊತೆಗೆ ತಂತ್ರಜ್ಞಾನವನ್ನು ಎಲ್ಲಾ ಯೋಜನೆಗಳ ಪ್ರಮುಖ ಭಾಗವಾಗಿಸಿದೆ. “ತಂತ್ರಜ್ಞಾನ ಮೊದಲು” ಎಂಬುದು ತಮ್ಮ ಆಡಳಿತದ ಮಾದರಿಯಾಗಿದೆ, ತಂತ್ರಜ್ಞಾನದ ಬಳಕೆಯಿಂದ ಮನುಷ್ಯ ಬದುಕಿನ ಘನತೆಯನ್ನು ಉನ್ನತಿಗೇರಿಸಲಾಗಿದೆ ಎಂದರು.
ಡಿಜಿಟಲ್ ತಂತ್ರಜ್ಞಾನವು ಜನರಿಗೆ ಪಾರದರ್ಶಕ ರೀತಿಯಲ್ಲಿ ತ್ವರಿತವಾಗಿ ಸೇವೆಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತಿದೆ. ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ, ನಿರ್ಲಕ್ಷಿತ ಸಮುದಾಯಗಳಿಗೆ ಹಾಗೂ ಸರ್ಕಾರಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಇದಕ್ಕಾಗಿ ನಾವು “ಡಿಜಿಟಲ್ ಇಂಡಿಯಾ”ಗೆ ಧನ್ಯವಾದ ಸಲ್ಲಿಸಬೇಕು ಎಂದು ಸಂತಸ ವ್ಯಕ್ತಪಡಿಸಿದರು.
ಅಲ್ಲದೆ ಕೋವಿಡ್ ಸೋಂಕಿನ ಸನ್ನಿವೇಶದಲ್ಲಿ ರೂಢಿಗೆ ಬಂದ “ಎಲ್ಲಿಂದಾದರೂ ಕೆಲಸ ಮಾಡಿ” ಎಂಬ ಪರಿಕಲ್ಪನೆಯು ಇನ್ನು ಮುಂದೆಯೂ ಉಳಿದುಕೊಳ್ಳಲಿದೆ. ಶಿಕ್ಷಣ, ಆರೋಗ್ಯಸೇವೆ, ಶಾಪಿಂಗ್ ಸೇರಿದಂತೆ ಹಲವು ವಲಯಗಳಲ್ಲಿ ತಂತ್ರಜ್ಞಾನದ ಆನ್ವಯಿಕತೆಯು ಹೆಚ್ಚಾಗಲಿದೆ ಎಂದರು.
ಭಾರತಕ್ಕೆ ಇಂಟರ್ ನೆಟ್ 25 ವರ್ಷಗಳ ಹಿಂದೆ ಪದಾರ್ಪಣೆ ಮಾಡಿತು. ಈಗ ದೇಶದಲ್ಲಿ 75 ಕೋಟಿ ಇಂಟರ್ ನೆಟ್ ಸಂಪರ್ಕಗಳಿವೆ. ಇದರಲ್ಲಿ ಶೇ 50ಕ್ಕೂ ಹೆಚ್ಚು ಸಂಪರ್ಕಗಳು ಕಳೆದ ನಾಲ್ಕು ವರ್ಷಗಳಲ್ಲಿ ಆಗಿವೆ. ದೇಶದ ಪ್ರತಿಯೊಂದು ಮನೆಗೂ ವಿದ್ಯುತ್ ಎಂಬುದು ಬಹುತೇಕ ಸಾಕಾರಗೊಳ್ಳಲು ಕೂಡ ತಂತ್ರಜ್ಞಾನವೇ ಕಾರಣವಾಗಿದೆ. ಇದೀಗ ತಂತ್ರಜ್ಞಾನದ ಮಜಲನ್ನು ಇನ್ನಷ್ಟು ಉನ್ನತಿಗೇರಿಸುವ ಬಗ್ಗೆ ನಾವು ಆಲೋಚಿಸಬೇಕಿದೆ ಎಂದಿದ್ದಾರೆ.


