ಡಿಸೆಂಬರ್ 3 ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಡುಪಿಗೆ -Vishwanews24
ಡಿಸೆಂಬರ್ 3 ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ -Vishwanews24
ಉಡುಪಿ: ಕರ್ನಾಟಕ ಸರಕಾರದ ಗೃಹ ಸಚಿವರೂ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಡಿಸೆಂಬರ್ 3ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಗುರುವಾರ ಬೆಳಿಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸುವ ಅವರು ಉಡುಪಿಯಲ್ಲಿ ಕನಕದಾಸ ಜಯಂತಿ ಆಚರಣೆಯಲ್ಲಿ ಭಾಗವಹಿಸಲಿದ್ದು, ಬಳಿಕ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ 11 ಗಂಟೆಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಿರುವ ದ್ರವ ರೂಪದ ಅಮ್ಮಜನಕ ನೂತನ ಘಟಕ ಉದ್ಘಾಟಿಸಿ ಬಳಿಕ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಿದ್ದು ತದನಂತರ ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4 ಗಂಟೆಗೆ ಮಣಿಪಾಲದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಮಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಬಳಿ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ತದನಂತರ ಸಂಜೆ 4.45 ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ನಿಟ್ಟೂರು ಇದರ ಕಟ್ಟಡ ಉದ್ಘಾಟನೆ ನಡೆಸಿ ಸಂಜೆ 5.30 ಕ್ಕೆ ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
