ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ – vishwanews24
ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ
ಬೆಳಗಾವಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ಕೇಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ, ನಟ ಪ್ರಕಾಶ್ ರಾಜ್ ಹೆಸರನ್ನು ಕೂಡ ಉಲ್ಲೇಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ ವಿರುದ್ಧ ಶ್ರೀರಾಮಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಕನ್ನಡ ಭವನದ ಬಳಿ ಸೇರಿದ ಶ್ರೀರಾಮಸೇನೆ ಕಾರ್ಯಕರ್ತರು, ಪ್ರಕಾಶ್ ರಾಜ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕಾಶ್ ರಾಜ್ ಓರ್ವ ಧರ್ಮದ್ರೋಹಿ ಎಂದು ಕಿಡಿಕಾರಿದರು.
ಪ್ರತಿಭಟನೆ ವೇಳೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ಹೆಸರು ಕೆಡಿಸುವ ಮತ್ತು ಅದಕ್ಕೆ ಅಪಖ್ಯಾತಿ ತರುವ ದೊಡ್ಡದೊಂದು ಪಿತೂರಿಯ ಹಿಂದೆ ಬಹುಭಾಷಾ ನಟ ಪ್ರಕಾಶ್ ರಾಜ್ ಕೈವಾಡವಿದ್ದು, ಕೂಡಲೇ ವಿಶೇಷ ತನಿಖಾ ತಂಡ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ನಟನ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಬೇಕು. ಧರ್ಮಸ್ಥಳದ ತಲೆಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ಎಂಬಾತನೇ ಈ ಇಡೀ ಪ್ರಕರಣದ ಮುಖ್ಯ ಸಂಚುಕೋರ ನಟ ಪ್ರಕಾಶ್ ರಾಜ್ ಎಂದು ಹೆಸರಿಸಿದ್ದಾನೆ. ಹೀಗಾಗಿ ಎಸ್ಐಟಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಕಾಶ್ ರಾಜ್ ಅವರನ್ನು ವಶಕ್ಕೆ ಪಡೆಯಬೇಕು ಎಂದರು.
ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ – vishwanews24
