ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ರಸ್ತೆ ಮೂಲಕ ಕೊಲ್ಲೂರಿಗೆ ಪ್ರಯಾಣ ಬೆಳೆಸಿದ ಶ್ರೀಲಂಕಾ ಪ್ರಧಾನಿ -Vishwanews24
ಮಂಗಳೂರು: ಬೆಳಿಗ್ಗೆಯಿಂದಲೇ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕಾರಣ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಸ್ತೆ ಮೂಲಕ ಕೊಲ್ಲೂರಿಗೆ ತೆರಳಿದ್ದಾರೆ.
ನಗರದ ಹಲವೆಡೆ ನೀರು ತುಂಬಿಕೊಂಡಿದ್ದು, ಜನರು ಓಡಾಡಲು ತೊಂದರೆ ಅನುಭವಿಸುವಂತಾಗಿದೆ. ನಗರದ ಸೆಂಟ್ರಲ್ ರೈಲು ನಿಲ್ದಾಣದ ಆವರಣದಲ್ಲಿ ನೀರು ತುಂಬಿಕೊಂಡಿದ್ದು,ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಪಾರ್ಕಿಂಗ್ ಸ್ಥಳವು ಸಂಪೂರ್ಣ ಜಲಾವೃತಗೊಂಡಿದೆ.
ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಅವರ ಕೊಲ್ಲೂರಿನ ಅವರ ಪ್ರಯಾಣ ನಿಗದಿಯಾಗಿತ್ತು. ಆದರೆ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆಯಿಂದಲೇ ತೀವ್ರ ಮಳೆಯ ಕಾರಣ, ಹೆಲಿಕಾಪ್ಟರ್ ಮೂಲಕ ಕೊಲ್ಲೂರು ಪ್ರಯಾಣ ಕೊನೆ ಕ್ಷಣದಲ್ಲಿ ಬದಲಾವಣೆಗೊಂಡು ಅವರು ರಸ್ತೆ ಮೂಲಕ ಇದೀಗ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಈ ಹಿನ್ನಲೆಯಲ್ಲಿ ರಸ್ತೆಯುದ್ದಕ್ಕೂ ತೀವ್ರ ಭದ್ರತೆ ಏರ್ಪಡಿಸಲಾಗಿದೆ.
ವಿಕ್ರಂ ಸಿಂಘೆ ಆಗಮನದ ಪ್ರಯುಕ್ತ ಭದ್ರತಾ ಹಿತದೃಷ್ಟಿಯಿಂದ ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2.30ರ ವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

