ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24
ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ
ಮಂಗಳೂರು: ನಾಗುರಿಯಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಪೆ ಕಾಮಗಾರಿಯ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದ ಉಂಟಾದ ನೀರಿನ ಒತ್ತಡಕ್ಕೆ ಗೋಡೆ ಕುಸಿದಿರುವ ಸಾಧ್ಯತೆಯಿದ್ದು, ಗೋಡೆಯ ನಿರ್ಮಾಣದಲ್ಲಿ ಕಾಮಗಾರಿ ದೋಷವಿದೆಯೇ ಎಂಬ ಬಗ್ಗೆ ತೀವ್ರ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಘಟನೆಯ ನಿಖರ ಕಾರಣ ಪತ್ತೆಹಚ್ಚಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದ್ದು, ತಾಂತ್ರಿಕ ತಜ್ಞರ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಳಪೆ ಕಾಮಗಾರಿ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಲ್ಲದೆ, ಅನಧಿಕೃತವಾಗಿ ಗುಡ್ಡ ಅಗೆದು ಅಪಾಯಕ್ಕೆ ಕಾರಣರಾದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದರು.
ತಾಂತ್ರಿಕ ವರದಿ ಕೈ ಸೇರಿದ ತಕ್ಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದರು.
