ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ -Vishwanews24
ನವದೆಹಲಿ : INX ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ, ನಿರೀಕ್ಷಣಾ ಜಾಮೀನು ನೀಡುವಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ವಜಾಗೊಳಿಸಿದೆ.
ಚಿದಂಬರಮ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ಕೊಡುವಂತೆ ಜಾರಿ ನಿರ್ದೇಶನಾಲಯ ಮಾಡಿಕೊಂಡ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಇವತ್ತು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಪೀಠದ ನ್ಯಾಯಾಧೀಶರು, ಈ ಹೊತ್ತಿನಲ್ಲಿ ಚಿದಂಬಮ್ ಅವರಿಗೆ ನಿರೀಕ್ಷಣಾ ಜಾಮೀನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ತೀರ್ಮಾನಿಸಿದರು.
ನಿರೀಕ್ಷಣಾ ಜಾಮೀನು ಕೊಡಲೇಬೇಕೆಂದಿಲ್ಲ. ಆರ್ಥಿಕ ಅಪರಾಧದ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನನ್ನು ವಿಶೇಷ ಸಂದರ್ಭದಲ್ಲಿ ಮಾತ್ರ ನೀಡಬಹುದಾಗಿದೆ. ತನಿಖೆಯ ಆರಂಭಿಕ ಹಂತಗಳಲ್ಲೇ ನಿರೀಕ್ಷಣಾ ಜಾಮೀನು ನೀಡಿದರೆ ತನಿಖೆಯ ಕಾರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
2017ರ ಮೇ 15 ರಂದು ಸಿಬಿಐ ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿತ್ತು. ಐಎನ್ ಎಕ್ಸ್ ಮಾಧ್ಯಮ ಸಮೂಹ ವಿದೇಶದಿಂದ 305 ಕೋಟಿ ರೂಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಳ್ಳಲು ಚಿದು ಅವಕಾಶ ಕೊಟ್ಟಿದ್ದರು. 2007ರಲ್ಲಿ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಈ ಅಕ್ರಮಕ್ಕೆ ಅವಕಾಶ ನೀಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣ ನಡೆದು 10 ವರ್ಷಗಳ ಬಳಿಕ ಸಿಬಿಐ ಹಾಗೂ ಇಡಿ ಪ್ರತ್ಯೇಕವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದವು.
