ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ : ಮೊದಲ ಕಂತಿನ ರೂ. 2000 ಬಿಡುಗಡೆಗೆ ಸುಗ್ರೀವಾಜ್ಞೆ -Vishwanews24
ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ವತಿಯಿಂದ ಪಾವತಿಸುವ ರೂ.4000 ಗಳಲ್ಲಿ ಮೊದಲ ಕಂತಿನ ರೂ.2000 ಬಿಡುಗಡೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ.
ರಾಜ್ಯದ ತುರ್ತು ಕಾರ್ಯಕ್ರಮಗಳ ನಿರ್ವಹಣಾ ನಿಧಿಯ ಮೊತ್ತವನ್ನು 80 ಕೋಟಿ ರೂ.ನಿಂದ 2200 ಕೋಟಿ ರೂ.ಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತಿನ ರೂ. ಎರಡು ಸಾವಿರ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ.
ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದ್ದು, ರಾಜ್ಯ ಪಾಲರ ಒಪ್ಪಿಗೆ ಸಿಕ್ಕ ಬಳಿಕ ಅನುಷ್ಠಾನಗೊಳ್ಳಲಿದೆ. ಕೇಂದ್ರ ಸರ್ಕಾರವು ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ವಾರ್ಷಿಕ ರೂ. 6 ಸಾವಿರ ನೆರವು ನೀಡುವ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರವು ಘೋಷಿಸಿರುವ ರೂ.4 ಸಾವಿರ ನೆರವಿನ ಯೋಜನೆ ಜಾರಿಗೆ ಯಡಿಯೂರಪ್ಪ ಮುಂದಾಗಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರಕ್ಕೆ 43.75 ಲಕ್ಷ ಅರ್ಹ ಫಲಾನುಭವಿಗಳನ್ನು ಘೋಷಣೆ ಮಾಡುವಂತೆ ಕಳುಹಿಸಲಾಗಿದೆ.
