ಫೇಸ್ ಬುಕ್ ನಲ್ಲಿ ವಿವಾದಿತ ಪೋಸ್ಟ್ ಹಾಕಿದ್ದು ನಾನೇ : ಪೊಲೀಸರ ಮುಂದೆ ಆರೋಪಿ ನವೀನ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಹಾಕಿರುವುದಾಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ.

ಡಿಜೆ ಹಳ್ಳಿ‌ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಅನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿ 8 ಗಂಟೆಗೆ ಅದನ್ನು ಡಿಲೀಟ್ ಮಾಡಿದ್ದೆ. ಆದರೆ, ಆ ಒಂದು ಪೋಸ್ಟ್ ನಿಂದಾಗಿ ಇಂತಹ ಘಟನೆಗಳು ನಡೆಯುತ್ತವೆ ಎಂದು ತಾನು ಊಹಿಸಿರಲಿಲ್ಲ ಎಂದು ನವೀನ್ ಪೊಲೀಸರಿಗೆ ತಿಳಿಸಿದ್ದಾನೆ.

ಶಾಸಕ ಅಖಂಡ ಶ್ರೀನಿವಾಸ್​ ಅಕ್ಕನ ಮಗನಾಗಿರುವ ಆರೋಪಿ ನವೀನ್​ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿತ್ತು. ಮಹಮ್ಮದ್ ಪೈಗಂಬರ್ ಬಗ್ಗೆ ಕೆಟ್ಟದಾಗಿ ಸ್ಟೇಟಸ್ ಹಾಕಿ ಬಳಿಕ ಡಿಲೀಟ್​ ಮಾಡಿದ್ದಾಗಿ ನವೀನ್​ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.