ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜುಲೈ 16ರ ತನಕ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ -Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಜುಲೈ 16ರ ತನಕ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ -Vishwanews24

ಬೆಂಗಳೂರು: ಇಂದಿನಿಂದ ಜುಲೈ 16ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿ ಐಎಂಡಿ ಬೆಂಗಳೂರು ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದರು. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಪ್ರಭಾವದಿಂದ ಕರಾವಳಿ, ಉತ್ತರ-ಒಳನಾಡು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಜುಲೈ 12-16ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಜುಲೈ 10-16 ರವರೆಗೆ ಭಾರಿಯಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಮುಂಗಾರು ವೇಗ ಪಡೆದುಕೊಂಡಿರುವುದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೇ ಜು.13ರಂದು ಆರೆಂಜ್‌ ಹಾಗೂ ಜು.14 ಮತ್ತು 15ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ ಕೂಡ. ಕರಾವಳಿ ಜಿಲ್ಲೆಗಳಾದ – ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಭಾನುವಾರ ಸಂಜೆಯಿಂದಲೇ ಭಾರಿ ಮಳೆಯಾಗುತ್ತಿದೆ. ಈಗಾಗಲೇ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆರಾಯ ತನ್ನ ಕೃಪೆಯನ್ನು ತೋರಿದ್ದು, ವ್ಯವಸಾಯಕ್ಕೆ ಭೂಮಿ ಹದ ಮಾಡಿಕೊಂಡು ಕಾಯುತ್ತಿದ್ದ, ರೈತಾಪಿ ವರ್ಗಕ್ಕೆ ನೆಮ್ಮದಿ ಸಿಕ್ಕಿದೆ. ರೈತರು ಈಗಾಗಲೇ ತಮ್ಮ ಭೂಮಿಗಳಲ್ಲಿ ಬಿತ್ತನೆ ಕಾರ್ಯವನ್ನು ಕೂಡ ಶುರುಮಾಡಿದೆ. ಈ ಬಾರಿ ಉತ್ತಮ ಪ್ರಮಾಣದಲ್ಲಿ ದೇಶದಲ್ಲಿ ಮಳೆಯಾಗುವುದು ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.