ಬೆಳ್ತಂಗಡಿ : ಪಾಕಿಸ್ತಾನ ಪರ ಘೋಷಣೆ : ಮೂವರ ಬಂಧನ -Vishwanews24
ಬೆಳ್ತಂಗಡಿ : ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮತ ಎಣಿಕೆ ಕೇಂದ್ರದಲ್ಲಿ ಬುಧವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಕುವೆಟ್ಟು ಗ್ರಾಮ ನಿವಾಸಿಗಳಾದ ಮುಹಮ್ಮದ್ ಹರ್ಷದ್ (22), ದಾವೂದ್ (36) ಹಾಗೂ ಇಸಾಕ್ (28) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ನಡೆಯುತ್ತಿದ್ದ ಸಂದರ್ಭ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿ ಬಂದ ಹಿನ್ನಲೆಯಲ್ಲಿ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಈ ಕೃತ್ಯಕ್ಕೆ ವಿರೋಧವನ್ನೂ ವ್ಯಕ್ತಪಡಿಸಿದ್ದರು. ಘೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೋಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದರು.
ಎಸ್ ಡಿಪಿಐ ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ವೃತ್ತನಿರೀಕ್ಷಕ ಪಿ.ಜಿ ಸಂದೇಶ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿತ್ತು, ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮೀಪ್ರಸಾದ್ ಸೂಚನೆ ಮೇರೆಗೆ ತನಿಖೆ ಕೈಗೊಳ್ಳಲಾಗಿದ್ದು, ವೈರಲ್ ಆಗಿರುವ ವಿಡಿಯೋ ಆಧರಿಸಿ ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದರು.
ಇದೀಗ ಈ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
