ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳುವಂತೆ ಆದೇಶಿಸಿದ ಯೋಗಿ ಸರಕಾರ -Vishwanews24
ಲಖನೌ: ಭ್ರಷ್ಟಾಚಾರದ ನಿರ್ಮೂಲನೆ ಮಾಡಲು ಟೊಂಕ ಕಟ್ಟಿ ನಿಂತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ ಇದೀಗ ಸುಮಾರು 200 ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳುವಂತೆ ಆದೇಶಿಸಿದೆ.
ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಭ್ರಷ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಗುರುತಿಸುವ ಕೆಲಸವನ್ನು ಸಿಬ್ಬಂದಿ ಸಚಿವಾಲಯ ಮಾಡಿತ್ತು. ಭ್ರಷ್ಟಾಚಾರ ಆರೋಪ ಹೊತ್ತಿರುವ 600ಕ್ಕೂ ಹೆಚ್ಚು ಅಧಿಕಾರಿಗಳ ಪಟ್ಟಿ ಸಿದ್ಧಗೊಂಡಿದೆ. ಅದರನ್ವಯ ಪೊಲೀಸ್, ಸಾರಿಗೆ, ಶಿಕ್ಷಣ ಸೇರಿದಂತೆ 29 ಇಲಾಖೆಗಳ ಒಟ್ಟು 200 ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಲಾಗಿದೆ.
ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಸರ್ಕಾರದ ವಕ್ತಾರ, ಸಚಿವ ಶ್ರೀಕಾಂತ್ ಶರ್ಮಾ, 600 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವುದು ಇಡೀ ದೇಶದಲ್ಲೇ ಇದೇ ಮೊದಲು ಎಂದು ಹೇಳಿದ್ದಾರೆ.
ಜೂ.20ರಂದು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಯೋಗಿ, ಅದಕ್ಷ ಮತ್ತು ಭ್ರಷ್ಟ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದ್ದರು. ಇಂಥ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಲು ಸೂಚಿಸಿದ್ದರು ಎಂದು ಶರ್ಮಾ ತಿಳಿಸಿದ್ದಾರೆ.
ಯಾರು ನಿವೃತ್ತಿ ಪಡೆಯುವುದಿಲ್ಲವೋ ಅವರನ್ನು ಸೇವೆಯಿಂದ ಅಮಾನತುಗೊಳಿಸುವುದಾಗಿ ಖಡಕ್ ಸೂಚನೆ ನೀಡಿದೆ.

