ಮಂಗಳೂರು : ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆ : ವೇದವ್ಯಾಸ ಕಾಮತ್‌ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌ ಅವರ ಮನವಿಯ ಮೇರೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆಗೊಳಿಸಲು ಸರಕಾರ ಸಮ್ಮತಿಸಿದೆ ಎಂದು ಶಾಸಕ ಕಾಮತ್‌ ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗಾಗಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹತ್ತು ಕೋಟಿ ಅನುದಾನವನ್ನು ಅನುಮೋದಿಸಿದ್ದಾರೆ. ಹತ್ತು ಕೋಟಿಯ ಮೊತ್ತಕ್ಕೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿಸಿದೆ.

ಅದೇ ಪ್ರಕಾರ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗಾಗಿ ಎಸ್‌.ಎಫ್‌.ಸಿ (ವಿಶೇಷ ಅನುದಾನ) ಬಿಡುಗಡೆ ಮಾಡುವಂತೆ ಶಾಸಕ ಕಾಮತ್‌ ಮುಖ್ಯಮಂತ್ರಿ ಅವರನ್ನು ಕೋರಿದ್ದರು. ಅದರಂತೆ ತಮ್ಮ ವಿವೇಚನಾ ನಿಧಿಯ ಅಡಿಯಲ್ಲಿಎಸ್‌ಎಫ್‌ಸಿ ವಿಶೇಷ ಅನುದಾನವಾಗಿ 15 ಕೋಟಿ ರೂಪಾಯಿಯನ್ನು ಅನುಮೋದಿಸಿದ್ದಾರೆ. ಹೀಗೆ ಒಟ್ಟು 25 ಕೋಟಿ ರೂಪಾಯಿಗಳನ್ನು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರಕಾರದ ಮೂಲಕ ಮುಖ್ಯಮಂತ್ರಿ ಬಿಡುಗಡೆಗೊಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೆ. ಈ ಹಿನ್ನೆಲೆಯಲ್ಲಿಮುಖ್ಯಮಂತ್ರಿಗಳು ಅನುದಾನ ಬಿಡುಗಡೆಗೊಳಿಡಿದ್ದಾರೆ. ಅವರಿಗೆ ಕ್ಷೇತ್ರದ ಪರವಾಗಿ ಧನ್ಯವಾದ ಸಮರ್ಪಿಸುತ್ತೇನೆ ಎಂದು ಶಾಸಕ ಕಾಮತ್‌ ತಿಳಿಸಿದರು.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಅನೇಕ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೊಳಿಸುವ ಯೋಜನೆಯನ್ನು ಈ ಹಿಂದೆಯೇ ರೂಪಿಸಿದ್ದೆ. ಆದರೆ ಅನುದಾನದ ಕೊರತೆಯಿಂದ ಕಳೆದ ಒಂದು ವರ್ಷದಿಂದ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗಲಿಲ್ಲ. ಈಗ ಅಭಿವೃದ್ಧಿಯ ಹೊಸ ಶಖೆ ಪ್ರಾರಂಭವಾಗಿದೆ. ನಮ್ಮ ಸರಕಾರದ ಅವಧಿಯಲ್ಲಿಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯ ಉತ್ತುಂಗಕ್ಕೇರಿಸುವ ಕನಸಿದೆ. ಅದನ್ನು ಸಾಕಾರಗೊಳಿಸಲು ಸರಕಾರದಿಂದ ಮತ್ತಷ್ಟು ಅನುದಾನ ತರುವಲ್ಲಿನಿರಂತರವಾಗಿ ಶ್ರಮಿಸುವುದಾಗಿ ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದ್ದಾರೆ.