ಮಂಗಳೂರು : ಸೆಂಟ್ರಲ್ ಮಾರ್ಕೆಟ್ ಮತ್ತೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ..Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಆಗಸ್ಟ್ 13 ರಂದು ಬಾಗಿಲು ತೆರೆದಿದ್ದ ಮಂಗಳೂರು ಸೆಂಟ್ರಲ್ ಮಾರ್ಕೆಟ್ ಮತ್ತೆ ಬಂದ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಕೊರೊನಾ ಪಿಡುಗಿನ ಹಿನ್ನೆಲೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೇಂದ್ರ ಮಾರುಕಟ್ಟೆಯನ್ನು ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಮಾರುಕಟ್ಟೆಯಲ್ಲಿ ವ್ಯಾಪಾರದಲ್ಲಿ ತೊಡಗಿಕೊಂಡವರು ಬೈಕಂಪಾಡಿಯ ಎಪಿಎಂಸಿಯಲ್ಲಿ ವ್ಯಾಪಾರ-ವಹಿವಾಟು ಮುಂದುವರಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಆದೇಶ ಪಾಲಿಸದೇ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತಹವರ ವಿರುದ್ಧ ಭಾರತೀಯ ದಂಡ ಸಂಹಿತೆ 1860ರ ಕಲಂ 188ರ ಅನ್ವಯ ಹಾಗೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮಾರುಕಟ್ಟೆಯಲ್ಲಿ ಪ್ರಸ್ತುತ ವರ್ತಕರು ತಮ್ಮ ಅಂಗಡಿಯಲ್ಲಿ ವ್ಯವಹಾರ ಮುಂದುವರಿಸುತ್ತಿರುವುದು ಗಮನಕ್ಕೆ ಬಂದಿದೆ.ಮಾರುಕಟ್ಟೆ ಯಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆಯಿದೆ.

ಕೇಂದ್ರ ಮಾರುಕಟ್ಟೆಯಲ್ಲಿ ಪ್ರಸ್ತುತ ವರ್ತಕರು ವ್ಯಾಪಾರ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆಯಿರುತ್ತದೆ. ಕೊರೊನಾದ ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಿದೆ. ಕೊರೊನಾ ಸಂಬಂಧ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಆಗಸ್ಟ್‌ 17 ರಂದು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು ಕೇಂದ್ರ ಮಾರುಕಟ್ಟೆಗೆ ರಾಜ್ಯ, ಅಂತರ್‌ ರಾಜ್ಯ, ಜಿಲ್ಲೆ, ಅಂತರ್‌ ಜಿಲ್ಲೆಗಳಿಂದ ಹಣ್ಣು ಹಂಪಲು, ತರಕಾರಿ ಮೊದಲಾದ ನೂರಾರು ವಾಹನಗಳು ಬಂದು ಹೋಗುತ್ತದೆ. ಇಲ್ಲಿ 1500 – 2000 ದಷ್ಟು ಹಮಾಲರು, ವ್ಯಾಪಾರಸ್ಥರು ಇದ್ದು ಇಕ್ಕಟ್ಟಿನ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದೆ ಕೊರೊನಾ ಸೋಂಕು ಶೀಘ್ರವೇ ಹರಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಾಗೆಯೇ ಇಲ್ಲಿ ಗ್ರಾಹಕರು, ಕಾರ್ಮಿಕರು, ಮಾಲೀಕರು ಮಾಸ್ಕ್‌ ಅಥವಾ ಫೇಸ್‌ ಶೀಲ್ಡ್‌ಗಳನ್ನು ಧರಿಸುವುದು ಕಂಡು ಬರುತ್ತಿಲ್ಲ. ಬೆರಳೆಣಿಕೆಯ ಮಂದಿ ಮಾತ್ರ ಮಾಸ್ಕ್‌ ಧರಿಸುತ್ತಿದ್ದಾರೆ. ಇನ್ನು ಕೇಂದ್ರ ಮಾರುಕಟ್ಟೆಯಲ್ಲಿ ಮಾಂಸದ ಅಂಗಡಿಗಳಿಗೆ ಸಮರ್ಪಕವಾದ ವ್ಯವಸ್ಥೆಯಿಲ್ಲದೇ ಇರುವುದರಿಂದ ಶುಚಿತ್ವವನ್ನು ಕಾಪಾಡುವುದು ಕಷ್ಟಕರವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.