ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ : ಸಿದ್ದರಾಮಯ್ಯ -Vishwanews24
ಬೆಂಗಳೂರು, : ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ರವಿವಾರ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮತನಾಡಿದ ಸಿದ್ದರಾಮಯ್ಯ, ಕೆಲ ಶಾಸಕರು ನನಗೆ ಆಪ್ತರು. ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ. ಹೋದವರಷ್ಟೇ ಅಲ್ಲ, ಇಲ್ಲಿ ಇರುವವರೂ ನನಗೆ ಆಪ್ತರು. ನಾನು ನಿಮ್ಮಲ್ಲಿ ಯಾರಿಗಾದರೂ ಬಿಜೆಪಿಗೆ ಹೋಗುವಂತೆ ಹೇಳಿದ್ದೀನಾ. ಅಂತಹ ನೀಚ ಕೆಲಸವನ್ನು ನಾನು ಮಾಡಲಾರೆ. ಇವರು ಮಾಡಿದ ಕೆಲಸದಿಂದ ನೋವಾಗಿದೆ ಎಂದರು.
ಬಸವರಾಜು, ಸೋಮಶೇಖರ, ಮುನಿರತ್ನ ಹೇಳಿದ ಕೆಲಸವನ್ನೆಲ್ಲ ಮಾಡಿಕೊಟ್ಟೆ. ಅವರೇ ಚೂರಿ ಹಾಕಿದರು. ನನ್ನ ಬಗ್ಗೆ ಅಪಪ್ರಚಾರ ಮಾಡಿದರೆ ಸಿಗುವ ಲಾಭವಾದರೂ ಏನು ? ಎಂಟಿಬಿ, ಮುನಿರತ್ನ, ಸುಧಾಕರ್ ಜೊತೆ ಗಂಟೆಗಟ್ಟಲೆ ಮಾತನಾಡಿದಾಗ ನಾವೂ ಎಲ್ಲೂ ಹೋಗುವುದಿಲ್ಲ ಎಂದು ಹೇಳಿ ಕೈ ಕೊಟ್ಟರು. ಮೋಸ ಮಾಡಿದರು. ಇದಕ್ಕಿಂತ ನೋವು ಇನ್ನೇನು ಆಗಬೇಕು ಎಂದು ಬೇಸರಿಸಿದರು.

