ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗೆ 1 ಕೋ. ರೂ. ವರೆಗೆ ಮಂಜೂರಾತಿಗೆ ಜಿಲ್ಲಾಧಿಕಾರಿಗಳಿಗೆ ಅವಕಾಶ : ಸಚಿವ ಕೋಟ ಶ್ರೀನಿವಾಸ ಪೂಜಾರಿ -Vishwanews24

Featured, ಉಡುಪಿ

ಉಡುಪಿ,: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ 1 ಕೋಟಿ ರೂಪಾಯಿಗಳ ವರೆಗೆ ಮಂಜೂರಾತಿಗೆ ಅಧಿಕಾರ ನೀಡುವ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇದೆ ಎಂದು ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ಪ್ರಸಕ್ತ 50 ಲಕ್ಷದವರೆಗಿನ ಯೋಜನೆಗಳಿಗೆ ಮಂಜೂರಾತಿ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ. ಇದನ್ನು ಒಂದು ಕೋಟಿ ರೂಪಾಯಿಗೆ ಏರಿಕೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಸಚಿವ ಸಂಪುಟದ ಮುಂದೆ ಬರಲಿದೆ. ಇದರಿಂದ ಪ್ರಮುಖ ದೇವಸ್ಥಾನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು.

ಕೊಲ್ಲೂರಿನಲ್ಲಿ ವಿಶಾಲವಾದ ಗೋಶಾಲೆ ನಿರ್ಮಿಸಲು ಸೂಕ್ತ ಜಮೀನು ಮಂಜೂರಾತಿ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲು ಸೂಚಿಸಿದ ಸಚಿವರು, ಜಮೀನು ಲಭ್ಯವಿಲ್ಲದಿದ್ದಲ್ಲಿ ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಅರಣ್ಯ ಜಾಗ ಬಳಸುವ ಬಗ್ಗೆ ಆ ಇಲಾಖೆಯೊಂದಿಗೆ ವ್ಯವಹರಿಸಲು ತಿಳಿಸಿದರು. ಹಬ್ಬ ಹರಿದಿನಗಳಲ್ಲಿ ಕೊಲ್ಲೂರಿನಲ್ಲಿ ವಾಹನಗಳ ಪಾರ್ಕಿಂಗ್‍ಗೆ ಸ್ಥಳಾವಕಾಶ ಕೊರತೆಯುಂಟಾಗುತಿರುವ ಬಗ್ಗೆ ತನ್ನ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ವಿಶಾಲವಾದ ಪಾರ್ಕಿಂಗ್ ತಾಣ ನಿರ್ಮಿಸುವ ಸಂಬಂಧ ಜಾಗ ಗುರುತಿಸಲು ದೇವಸ್ಥಾನ ಆಡಳಿತ ಮಂಡಳಿಗೆ ನಿರ್ದೇಶಿಸಿದರು. ಕೊಲ್ಲೂರು ಸರಕಾರಿ ಆಸ್ಪತ್ರೆಗೆ ಶೀಘ್ರವೇ ಪೂರ್ಣಪ್ರಮಾಣದ ವೈದ್ಯರನ್ನು ನೇಮಿಸಲಾಗುವುದು ಎಂದರು.