ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ : ವೀರಶೈವ–ಲಿಂಗಾಯತ ಮಠಾಧೀಶರ ಎಚ್ಚರಿಕೆ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಕಲಬುರ್ಗಿ: ‘ಬಸವ ತತ್ವದಂತೆ ನಡೆಯುತ್ತಿರುವ, ಕೊಡುಗೈ ದಾನಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಕಲ್ಯಾಣ ಕರ್ನಾಟಕ ಭಾಗದ ವೀರಶೈವ–ಲಿಂಗಾಯತ ಮಠಾಧೀಶರು ಎಚ್ಚರಿಕೆ ನೀಡಿದರು.

ಈ ಭಾಗಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿದ್ದಕ್ಕಾಗಿ ಯಡಿಯೂರಪ್ಪ ಅವರಿಗೆ ಮಂಗಳವಾರ ‘ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆ’ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಹಲವು ಮಠಾಧೀಶರು ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪ್ರಾಸ್ತಾವಿಕ ಭಾಷಣದಲ್ಲಿ ದೇವಾಪುರದ ಶಿವಮೂರ್ತಿ ಶಿವಾಚಾರ್ಯರು, ‘ಈ ಭಾಗದ ಮಠಗಳು ಶಿಕ್ಷಣ ಸಂಸ್ಥೆಗಳ ಮೂಲಕ ಅಕ್ಷರ ದಾಸೋಹ ನೀಡುತ್ತಿವೆ. ಸಂಕಷ್ಟದಲ್ಲಿದ್ದ ಮಠಗಳಿಗೆ ಯಡಿಯೂರಪ್ಪ ಅವರು ಆರ್ಥಿಕ ನೆರವು ನೀಡಿದ್ದಾರೆ’ ಎಂದು ಸ್ಮರಿಸಿದರು.

ಯಡಿಯೂರಪ್ಪ ಅವರನ್ನು ಆಧುನಿಕ ಬಸವಣ್ಣ ಎಂಬ ಕೆಲ ಮಠಾಧೀಶರ ಹೊಗಳಿಕೆಯನ್ನು ನಯವಾಗಿಯೇ ಆಕ್ಷೇಪಿಸಿದ ನಾಲವಾರ ಮಠದ ಸಿದ್ಧತೋಟೇಂದ್ರ ಶಿವಾಚಾರ್ಯರು, ‘ಸ್ವಾಮೀಜಿಗಳು ಸೇರಿದಂತೆ ಯಾರೂ ಬಸವಣ್ಣನವರ ವ್ಯಕ್ತಿತ್ವದ ಸಮೀಪ‍ಕ್ಕೂ ಸುಳಿಯಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರನ್ನು ಬಸವತತ್ವವನ್ನು ಎದೆಯಲ್ಲಿಟ್ಟುಕೊಂಡು ಆಚರಿಸುತ್ತಿರುವ ಬಸವ ಅನುಯಾಯಿ ಎನ್ನಬಹುದು’ ಎಂದರು.

ಸುಲಫಲ ಮಠಕ್ಕೆ ತೆರಳಿದ ಯಡಿಯೂರಪ್ಪ ಅವರು, ಅಲ್ಲಿ ಬಸವ ಭವನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ  ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ‘ಈ ಸರ್ಕಾರದ ಅವಧಿ ಮುಗಿಯುವವರೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕು. ಪದಚ್ಯುತಿಗೊಳಿಸಿ ದರೆ ಎಲ್ಲ ಮಠಾಧೀಶರು ದೆಹಲಿಯಲ್ಲಿ ಧರಣಿ ನಡೆಸುತ್ತೇವೆ’ ಎಂದು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜಯಸಿದ್ಧೇಶ್ವರ ಸ್ವಾಮೀಜಿ, ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಡಾ.ಶರಣಬಸವಪ್ಪ ಅಪ್ಪ, ಶಾಖಾಪುರ ಮಠದ ಸಿದ್ದರಾಮ ಶಿವಾಚಾರ್ಯರು, ಮಾದನ ಹಿಪ್ಪರಗಾದ ಶಿವಲಿಂಗ ಸ್ವಾಮೀಜಿ, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು, ಕಡಕೋಳದ ಡಾ.ರುದ್ರಮುನಿ ಶಿವಾಚಾರ್ಯರು, ಪಾಳಾದ ಡಾ.ಗುರುಮೂರ್ತಿ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಕಡಗಂಚಿಯ ಶಾಂತಲಿಂಗ ಶಿವಾಚಾರ್ಯರು, ಮಹಾಗಾಂವ ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಇದ್ದರು.