ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ, ರೈತರ ಕಷ್ಟ ಪರಿಹರಿಸುತ್ತಾರೆ ಎಂಬ ವಿಶ್ವಾಸವಿದೆ : ಶೋಭಾ ಕರಂದ್ಲಾಜೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿಗುತ್ತಿರುವುದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಅದರಲ್ಲೂ ಬರ ಪರಿಸ್ಥಿತಿ ಹೆಚ್ಚಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ, ರೈತರ ಕಷ್ಟ ಪರಿಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರೈತರು ಮಾತ್ರವಲ್ಲದೇ ನಾಡಿನ ಜನತೆಗೆ ಒಳ್ಳೆಯ ಆಡಳಿತ ನೀಡುತ್ತಾರೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಾದರೆ ಅಂತಹ ಶಾಸಕರನ್ನು ಬಿಜೆಪಿ ಮತ್ತೆ ಗೆಲ್ಲಿಸಲು ಯತ್ನ ನಡೆಸಲಿದೆ ಎಂದು ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ವಿರುದ್ಧ ಬೇಸತ್ತು ಶಾಸಕರು ರಾಜೀನಾಮೆ ನೀಡಿದ್ದರು. ಅವರು ಮತ್ತೆ ಕಾಂಗ್ರೆಸ್, ಜೆಡಿಎಸ್‍ಗೆ ಮರಳುವುದಿಲ್ಲ ಎಂದಿದ್ದಾರೆ. ನಮ್ಮ 105 ಶಾಸಕರು ಬಿಎಸ್‍ವೈ ಅವರ ಪರವಾಗಿ ಇದ್ದೇವೆ. ಮುಂದೆ ಏನಾಗುತ್ತೆ ಕಾದು ನೋಡುತ್ತೇವೆ. ರಾಜೀನಾಮೆ ಸ್ವೀಕಾರವಾಗಿ ಶಾಸಕರು ಬಿಜೆಪಿಗೆ ಬರಲು ಇಚ್ಛೆ ಇದ್ದರೆ ಹೈಕಮಾಂಡ್ ಅವರಿಗೆ ಸ್ವಾಗತ ನೀಡಲಿದೆ. ಅವರನ್ನು ಮತ್ತೆ ಅದೇ ಕ್ಷೇತ್ರದಿಂದ ಗೆಲ್ಲಿಸಿಕೊಡುವ ಪ್ರಯತ್ನವನ್ನು ಬಿಜೆಪಿ ಮಾಡಲಿದೆ ಎಂದು ಆಶ್ವಾಸನೆ ನೀಡಿದರು..

ಸಂಜೆ 6ರಿಂದ 6.15ರ ಒಳಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸರಳ ರೀತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಅವರೊಂದಿಗೆ ಬೇರೆ ಯಾವ ಶಾಸಕರೂ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸುತ್ತಿಲ್ಲ. ಸದ್ಯಕ್ಕೆ ಯಡಿಯೂರಪ್ಪ ಅವರ ಪ್ರಮಾಣವಚನಕ್ಕೆ ಮಾತ್ರ ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ನೀಡಿದೆ.