ಯುವ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಹತ್ಯೆ
ಬೆಂಗಳೂರು: ಅಳ್ಳಾಲಸಂದ್ರದ ಯುವ ಕಾಂಗ್ರೆಸ್ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕದ ಬಳಿ ನಡೆದಿದೆ.
ಅರುಣ್ (26) ಕೊಲೆಯಾದ ಯುವ ಕಾಂಗ್ರೆಸ್ ಅಧ್ಯಕ್ಷ. ಭಾನುವಾರ ತಡರಾತ್ರಿ ಸಿನಿಮಾ ವೀಕ್ಷಿಸಿ ವಾಪಸ್ಸಾಗುತ್ತಿದ್ದ ಅರುಣ್ರವರನ್ನು ಯಲಹಂಕದ ಅಲ್ಲಾಳಸಂದ್ರದ ಬಳಿ ಐದು ಜನ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ಏಕಾಏಕಿ ಮಾರಕಾಸ್ತ್ರಗಳಿಂದ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ಅರುಣ್ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಅರುಣ್ ಅಳ್ಳಾಲಸಂದ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದು, ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹಿರಾತು
