ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ – Vishwanews24
ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಕಲಬುರಗಿ ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಮೂವರು ಯುವಕರು ಹಾಗೂ ತೆಲಂಗಾಣದ ಒಬ್ಬ ಯುವಕನಿಗೆ ಉದ್ಯೋಗದ ಆಮಿಷವೊಡ್ಡಿ ಇದೀಗ ಅವರನ್ನು ಬಲವಂತವಾಗಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ತಳ್ಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಕಳೆದ ಒಂದು ವರ್ಷದಲ್ಲಿ ಭಾರತದ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾದ ಸೈನ್ಯದಲ್ಲಿ ಸಹಾಯಕರಾಗಿ ನೇಮಿಸಿಕೊಳ್ಳಲಾಗಿದೆ ಎಂಬ ಆಘಾತಕಾರಿ ವಿಷಯಗಳು ಬಿತ್ತರವಾಗುತ್ತಿದೆ.
ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಎಲ್ಲಾ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರುವಂತೆ ಪತ್ರದ ಮೂಲಕ ಖರ್ಗೆವಿನಂತಿಸಿದ್ದಾರೆ.
