ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ : 12 ಶಂಕಿತರು ವಶಕ್ಕೆ – Vishwanews24
ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ : 12 ಶಂಕಿತರು ವಶಕ್ಕೆ
ಶ್ರೀನಗರ: ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ಗುರುವಾರ ದಾಳಿ ನಡೆಸಿ ಐವರು ಸೈನಿಕರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ 12 ಜನ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕ ಸಂಘಟನೆಗಳ ಜೊತೆಗಿನ ನಂಟನ್ನು ಖಚಿತಪಡಿಸಿಕೊಳ್ಳಲು ಬಂಧನಕ್ಕೊಳಗಾದವರನ್ನು ವಿವಿಧ ಹಂತಗಳಲ್ಲಿ ಪ್ರಶ್ನಿಸಲಾಗುತ್ತಿದೆ. ಹಾಗೂ ಪೂಂಚ್ ಸೆಕ್ಟರ್ನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಭಯೋತ್ಪಾದಕ ಚಟುವಟಿಕೆಗಳು ಸಕ್ರಿಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ.
ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇದೆ. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್ಗಳು ಮತ್ತು ಬಾಂಬ್ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಭದ್ರತಾ ದೃಷ್ಟಿಯಿಂದ ಭಿಂಬರ್ ಗಲಿ ಮತ್ತು ಜರ್ರಾನ್ ವಾಲಿ ಗಲಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತ ಎರಡನೇ ದಿನವೂ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ ಮೂರರಿಂದ ನಾಲ್ಕು ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಶ್-ಎ-ಮೊಹಮ್ಮದ್ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದು ಮೂಲಗಳು ತಿಳಿಸಿವೆ.
