ಹುಬ್ಬಳ್ಳಿ, ಹೈದರಾಬಾದ್ ನಡುವಿನ ವಿಮಾನಯಾನಕ್ಕೆ ಚಾಲನೆ -Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿ, ಹೈದರಾಬಾದ್ ನಡುವಿನ ವಿಮಾನಯಾನಕ್ಕೆ ಚಾಲನೆ -Vishwanews24

ಹುಬ್ಬಳ್ಳಿ: ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಹೈದರಾಬಾದ್ ನಗರಕ್ಕೆ ವಿಮಾನಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಲೈಯನ್ಸ್ ಏರ್ ವೇಸ್ ನಿಂದ ಹೈದರಾಬಾದ್ ನಗರಕ್ಕೆ ಆರಂಭಿಸಲಾದ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಾರದಲ್ಲಿ ಮೂರು ದಿನ ಹೈದರಾಬಾದ್ ನಗರಕ್ಕೆ ವಿಮಾನ ಸಂಚರಿಸಲಿದೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಮುಂದಿನ ದಿನಗಳಲ್ಲಿ ವಾರದ ಏಳು ದಿನವೂ ಸೇವೆ ವಿಸ್ತರಿಸಲಾಗುವುದು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯವರ ವಿಶೇಷ ಪ್ರಯತ್ನದಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಆರಂಭವಾಗಿದೆ. ಅವರಿಗೆ ವಿಶೇಷ ಧನ್ಯವಾದಗಳು. ಹುಬ್ಬಳ್ಳಿ ಮಂಗಳೂರಿಗೆ ನಡುವೆ ವಿಮಾನ ಸಂಪರ್ಕ ಕಲ್ಪಿಸಲು ಬೇಡಿಕೆ ಇದೆ. ಇದನ್ನು ಸಹ ಶೀಘ್ರವಾಗಿ ಪ್ರಾರಂಭಿಸಲಾಗುವುದು.

ಇದನ್ನೂ ಓದಿ : ಶಿರ್ವ ಗ್ರಾ.ಪಂ. ಉಪ ಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ನ್ಯಾರ್ಮ ಶ್ರೀನಿವಾಸ ಶೆಣೈ ಗೆಲುವು -Vishwanews24

ಹುಬ್ಬಳ್ಳಿಯಲ್ಲಿ ರಾತ್ರಿ ಸಹ ವಿಮಾನ ಇಳಿಯಲು ಅವಕಾಶವಿದೆ. ಸ್ವಯಂ ಚಾಲಿತ ಲ್ಯಾಂಡಿಗ್ ಗೆ ವ್ಯವಸ್ಥೆಯಿದೆ. ಈಗಿನ ರನ್ ವೇ ಟ್ರಾಕ್ ವಿಸ್ತರಣೆ ಮಾಡಲಾಗುವುದು. ಮಧ್ಯ ಪ್ರಾಚ್ಯ ರಾಷ್ಟ್ರಗಳಿಗೆ ನೇರವಾಗಿ ವಿಮಾನ ಸೌಲಭ್ಯ ಕಲ್ಪಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲು ವಿಮಾನ ನಿಲ್ದಾಣ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ರನ್ ವೇ ವಿಸ್ತರಿಸಿದ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಆರಂಭವಾಗಲಿವೆ. ಈಗಾಗಲೇ ಮುಂಬೈ, ಅಹಮದಾಬಾದ್, ಕೊಚ್ಚಿ, ಕೊಣ್ಣೂರ್, ಗೋವಾಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಲಾಗಿದೆ. ಕೊರೊನಾ ನಂತರದ ಸ್ಥಿತಿಗತಿಗಳನ್ನು ನೋಡಿಕೊಂಡು ಇತರೆ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸಲಾಗುವುದು. ಟ್ರೂ ಜಟ್ ಮಾಲೀಕರೊಂದಿಗೆ ಹೆಚ್ಚಿನ ವಿಮಾನ ಸಂಪರ್ಕ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಕುಮಾರ್ ಠಾಕರೆ, ವಿಮಾನ ನಿಲ್ದಾಣ ಭದ್ರತಾಧಿಕಾರಿ ಜಗದೀಶ್ ಹಂಚಿನಾಳ್, ಏರ್ ಇಂಡಿಯಾ ಸಿಬ್ಬಂದಿ ನಾಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.