ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ
ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗೆ ಶುಕ್ರವಾರ ಶಿವಮೊಗ್ಗದ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಕಳೆದ 2022ರ ಡಿಸೆಂಬರ್ 18ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಗೋಡು ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿತ್ತು. ಗ್ರಾಮದ ನಿವಾಸಿಯಾದ 36 ವರ್ಷದ ರಾಜಪ್ಪ ಎಂಬಾತ ಅದೇ ಗ್ರಾಮದ 50 ವರ್ಷದ ಪಾರ್ವತಮ್ಮ ಎಂಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದನು. ಈ ವೇಳೆ ಮಹಿಳೆ ಪ್ರತಿರೋಧ ಒಡ್ಡಿದಾಗ, ತನ್ನ ಮರ್ಯಾದೆ ಹರಾಜಾಗುತ್ತದೆ ಎಂಬ ಭಯದಿಂದ ಆರೋಪಿ ರಾಜಪ್ಪ ಗುದ್ದಲಿಯಿಂದ ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದನು. ಅಷ್ಟಕ್ಕೇ ನಿಲ್ಲಿಸದ ಆತ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪಾರ್ವತಮ್ಮನವರ ಮೃತದೇಹವನ್ನು ಹತ್ತಿರದ ಬಾವಿಗೆ ಎಸೆದು ಪರಾರಿಯಾಗಿದ್ದನು. ಈ ಘಟನೆಗೆ ಸಂಬಂಧಿಸಿದಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಈ ಸೂಕ್ಷ್ಮ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಅವರು ಘಟನಾ ಸ್ಥಳದ ಪರಿಶೀಲನೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದರು. ತನಿಖೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ ಅವರು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆಯು ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಾಂತರಾಜ್ ಅವರು ನ್ಯಾಯಾಲಯದಲ್ಲಿ ಪ್ರಬಲವಾಗಿ ವಾದ ಮಂಡಿಸಿ, ಆರೋಪಿಯ ವಿರುದ್ಧದ ಸಾಕ್ಷ್ಯಗಳನ್ನು ನಿರೂಪಿಸುವಲ್ಲಿ ಯಶಸ್ವಿಯಾಗಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ಶ್ರೀ ಯಶವಂತ ಕುಮಾರ್ ಅವರು, ಆರೋಪಿ ರಾಜಪ್ಪ ಮಾಡಿರುವ ಅಪರಾಧ ಸಾಬೀತಾಗಿದೆ ಎಂದು ಪ್ರಕಟಿಸಿದರು.
ಪುತ್ತೂರು: ಕೋಮು ಪ್ರಚೋದನೆ ಆರೋಪ ; 7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24
ಅದರಂತೆ 2026ರ ಜುಲೈ 9ರಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ಆರೋಪಿಗೆ ಐಪಿಸಿ ಕಲಂ 302 (ಕೊಲೆ) ಮತ್ತು ಕಲಂ 201 (ಸಾಕ್ಷ್ಯ ನಾಶ) ಅಡಿಯಲ್ಲಿ ಜೀವಾವಧಿ ಕಠಿಣ ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
