ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24
ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24
ಉಡುಪಿ : ಆರೋಗ್ಯ ಸೇವೆಗಳನ್ನು ಜನಸಾಮಾನ್ಯರಿಗೆ ವ್ಯವಸ್ಥಿತವಾಗಿ ತಲುಪಿಸಲು ವಿವಿಧ ಆರೋಗ್ಯ ವ್ಯವಸ್ಥೆಯನ್ನು ಸರ್ಕಾರ ಇಲಾಖೆಯ ಮೂಲಕ ಮಾಡಿದ್ದು, ಅವುಗಳ ಸಮರ್ಪಕ ಅನುಷ್ಠಾನಗೊಳಿಸುವ ಕಾರ್ಯವನ್ನು ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ತಪ್ಪದೇ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಜನಸಾಮಾನ್ಯರ ಆರೋಗ್ಯ ಸುಧಾರಣೆಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಆರೋಗ್ಯವಂತ ಸಮಾಜವಿದ್ದಲ್ಲಿ ಮಾತ್ರ ಸದೃಡ ದೇಶ ನಿರ್ಮಾಣ ಮಾಡಲು ಸಾಧ್ಯ. ಈ ಹಿನ್ನಲೆ ಜಿಲ್ಲೆಯ ಪ್ರತಿಯೊಬ್ಬ ವ್ಯಕ್ತಿಯೂ ಉತ್ತಮ ಆರೋಗ್ಯವಂತನಾಗಿರುವAತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಗಳ ಮೇಲಿದೆ ಎಂದರು.
ಗರ್ಭಿಣಿ ಮಹಿಳೆಯರಿಗೆ ಪ್ರಾಥಮಿಕ ಹಂತದಲ್ಲಿಯೇ ಅವರುಗಳಿಗೆ ತಾಯಿ ಕಾರ್ಡ್ಗಳನ್ನು ವಿತರಿಸಿ, ಪ್ರತಿ ತಿಂಗಳು ನಿಯಮಿತ ತಪಾಸಣೆ ಕಾರ್ಯಗಳನ್ನು ಕೈಗೊಳ್ಳಬೇಕು. ಅವರಲ್ಲಿ ಇತರೇ ಕಾಯಿಲೆಗಳು ಇವೆ ಎಂಬ ಬಗ್ಗೆಯೂ ಸಹ ಪರೀಕ್ಷೆಗಳನ್ನು ಮಾಡುವುದರೊಂದಿಗೆ, ಅವುಗಳಿಗೂ ಚಿಕಿತ್ಸೆ ನೀಡುವುದು ಸೂಕ್ತ ಎಂದರು.
ಗರ್ಭಿಣಿ ಮಹಿಳೆಯರ ಪ್ರಸವ ಪ್ರಕರಣಗಳನ್ನು ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ ನಿರ್ವಹಿಸುವುದು ಕಷ್ಟವಾದ ಸಂದರ್ಭದಲ್ಲಿ ಅವರುಗಳನ್ನು ಇತರೇ ಆಸ್ಪತ್ರೆಗಳಿಗೆ ವರ್ಗಾಯಿಸುವಾಗ ರೋಗಿಯ ವೈದ್ಯಕೀಯ ಹಿನ್ನಲೆಯ ವಿವರಗಳನ್ನು ಹಂಚಿಕೊಳ್ಳುವಲ್ಲಿ ಸಮನ್ವಯತೆ ವಹಿಸುವುದು ಅತ್ಯಾವಶ್ಯಕವಾಗಿದ್ದು, ಇದನ್ನು ತಪ್ಪದೇ ನಿರ್ವಹಿಸಬೇಕೆಂದು ಸಲಹೆ ನೀಡಿದ ಅವರು, ಜಿಲ್ಲೆಯಲ್ಲಿ ತಾಯಿ ಮತ್ತು ಮಗು ಮರಣ ಪ್ರಮಾಣವನ್ನು ಶೂನ್ಯಕ್ಕಿಳಿಸುವಂತೆ ಸೂಚಿಸಿದರು.
ವೈದ್ಯರುಗಳು ಚಿಕಿತ್ಸೆಗೆ ಬರುವ ರೋಗಿಗಳೊಂದಿಗೆ ಸಹನೆಯೊಂದಿಗೆ ಸೌಹಾರ್ದಯುತವಾಗಿ ಅವರ ತೊಂದರೆಗಳನ್ನು ಆಲಿಸಿ ಚಿಕಿತ್ಸೆ ನೀಡಬೇಕು ಎಂದ ಅವರು, ಶಿಶುಗಳಿಗೆ ಸಾರ್ವತ್ರಿಕ ಸಾಮಾನ್ಯ ಲಸಿಕಾ ಕಾರ್ಯಕ್ರಮದಡಿ ನೀಡುವ ಚುಚ್ಚುಮದ್ದುಗಳನ್ನು ತಪ್ಪದೇ ನೀಡುವ ಕೆಲಸವಾಗಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ 4 ತಾಯಿ ಮಗು ಮರಣ ಸಂಭವಿಸಿದ್ದು, ಮರಣ ಸಂದರ್ಭದಲ್ಲಿ ತಪ್ಪದೇ ಶವ ಪರೀಕ್ಷೆಯನ್ನು ಮಾಡುವುದರೊಂದಿಗೆ ಸಾವಿನ ನಿಖರ ಕಾರಣಗಳನ್ನು ಪತ್ತೆ ಹಚ್ಚಬೇಕು. ಒಂದೊಮ್ಮೆ ವೈದ್ಯಕೀಯ ನಿರ್ಲಕ್ಷö್ಯದಿಂದ ಸಾವು ಸಂಭವಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ ಹಾಗೂ ಅರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
