ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಇದು ಆತ್ಮಹತ್ಯೆಯಲ್ಲ ಅತ್ಯಾಚಾರ ಮತ್ತು ಕೊಲೆ – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್
ರಾಯಚೂರು: ಇತ್ತೀಚೆಗೆ ರಾಯಚೂರಿನಲ್ಲಿ ನಡೆದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದು ಆತ್ಮಹತ್ಯೆಯಲ್ಲ ಬದಲಿಗೆ ಅತ್ಯಾಚಾರ ಮತ್ತು ಕೊಲೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಪ್ರಕರಣ ಈಗ ಹೊಸ ಟ್ವಿಸ್ಟ್ ಪಡೆದಿದೆ. ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಎಂದು ದಾಖಲಾಗಿದ್ದ ಪ್ರಕರಣ ಈಗ ಅತ್ಯಾಚಾರವೆಸಗಿ, ಕೊಲೆ ಎಂದು ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮಧು ತಾಯಿ ರೇಣುಕಾದೇವಿ ನೀಡಿದ ದೂರಿನ ಮೇರೆಗೆ ಪೊಲೀಸರು ಅತ್ಯಾಚಾರ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಮಧು ತಾಯಿ ರೇಣುಕಾದೇವಿ ನೀಡಿರುವ ದೂರಿನ ಮೇರೆಗೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಸುದರ್ಶನ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೂ ಎರಡು ಮೂರು ದಿನದಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಬರಲಿದ್ದು ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹೋರಾಟವನ್ನು ಇನ್ನೂ ಜೀವಂತವಿಟ್ಟಿರುವ ವಿದ್ಯಾರ್ಥಿಗಳು ಮಧುಸಾವಿಗೆ ನ್ಯಾಯ ಸಿಗುವವರೆಗೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಆಕೆಯ ಸಾವಿಗೆ ನ್ಯಾಯ ಸಿಗದಿದ್ದರೆ ರಾಯಚೂರು ಬಂದ್ ಮಾಡಿ ಹೋರಾಟ ನಡೆಸಲು ಮಂದಾಗುವುದಾಗಿ ತಿಳಿಸಿದ್ದಾರೆ.
ಇನ್ನು ಈಗಾಗಲೇ ಈ ಸಂಬಂಧ ತಮ್ಮ ಹೋರಾಟ ತೀವ್ರಗೊಳಿಸಿರುವ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜಸ್ಟಿಸ್ ಫಾರ್ ಮಧು (#JusticeForMadhu) ಎಂಬ ಹ್ಯಾಶ್ ಟ್ಯಾಗ್ ನಡಿಯಲ್ಲಿ ಅಭಿಯಾನ ಆರಂಭಿಸಿದ್ದು, ಇದಕ್ಕೆ ವ್ಯಾಪಕ ಬೆಂಬಲ ಕೂಡ ವ್ಯಕ್ತವಾಗುತ್ತಿದೆ.