ಉಡುಪಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು : ಅಧಿಕಾರಿಗಳಿಗೆ ಶೋಭಾ ಕರಂದ್ಲಾಜೆ -Vishwanews24
ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅತಿವೃಷ್ಟಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಭಾಗಶಃ ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನಃ ಪರಿಶೀಲಿಸಿ, ಗರಿಷ್ಠ ಮೊತ್ತದ ಪರಿಹಾರ ವಿತರಿಸುವಂತೆ ಎಲ್ಲ ತಹಸೀಲ್ದಾರ್ಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು. ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಬಜೆ ಡ್ಯಾಮ್ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.
ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.
