ಉಡುಪಿ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೃಷ್ಣಮೂರ್ತಿ ಆಚಾರ್ಯ ರಾಜೀನಾಮೆ – Vishwanews24

Featured, ಉಡುಪಿ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೃಷ್ಣಮೂರ್ತಿ ಆಚಾರ್ಯ ರಾಜೀನಾಮೆ

ಪಕ್ಷೇತರರಾಗಿ ಸ್ಪರ್ಧೆ ಘೋಷಣೆ

ಉಡುಪಿ: ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವಕಾಶ ನೀಡದಿರುವುದರಿಂದ ಅಸಮಾಧಾನಗೊಂಡಿರುವ ಉಡುಪಿ ಕ್ಷೇತ್ರದ ಟಿಕೇಟ್ ಆಕಾಂಕ್ಷಿ, ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಕೆ. ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಕೃಷ್ಣಮೂರ್ತಿ ಆಚಾರ್ಯ ವೈಯುಕ್ತಿಕ ಕಾರಣಗಳಿಂದಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ಪಕ್ಷೇತರರಾಗಿ ಸ್ಪರ್ಧೆ ಘೋಷಣೆ

ಇಂದು ಸಂಜೆ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ಯಲ್ಲಿ ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದವರು ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು ಶಾಸಕನಾಗಿ ಸೇವೆ ಮಾಡಬೇಕೆಂಬುದು ನನ್ನ ಜೀವನದ ಆಸೆಯಾಗಿತ್ತು ಆದರೆ ಪಕ್ಷಾಕ್ಕಾಗಿ ಹಲವು ವರ್ಷಗಳಿಂದ ದುಡಿದವರನ್ನು ಕೈಬಿಟ್ಟು ನಿನ್ನೆ ಮೊನ್ನೆ ಬಂದವರಿಗೆ ಟಿಕೇಟ್ ನೀಡಲಾಗಿದೆ. ಇದರಿಂದ ನನಗೆ ಅತೀವ ನೋವಾಗಿದ್ದು ಪಕ್ಷ ಇದನ್ನು ಗಮನಿಸಿ ಆಗಿರುವ ತಪ್ಪನ್ನು ಸರಿಪಡಿಸಬೇಕು ಇಲ್ಲವಾದರೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಕೃಷ್ಣಮೂರ್ತಿ ಆಚಾರ್ಯ ಘೋಷಿಸಿದರು.

ಅಭಿಮಾನಿಗಳ ಸಹಕಾರದಿಂದ ಈ ಬಾರಿ ಚುನಾವಣೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಪಕ್ಷವೇ ದೊಡ್ಡದು. ಆದರೆ ಅನ್ಯಾಯ ಮಾಡಿದಾಗ ನಾವು ತೋರಿಸಿಕೊಡಬೇಕು. ನನ್ನ ಹೋರಾಟವನ್ನು ಮುಂದುವರೆಸುತ್ತೇನೆ. ಕಾಂಗ್ರೆಸ್ ಪಕ್ಷದ ಧ್ವಜ ಇಟ್ಟು ಕೊಂಡೇ ಪ್ರಚಾರಕ್ಕೆ ಹೋಗುತ್ತೇನೆ ಎಂದರು.

Leave a Reply