ಉಡುಪಿ : ಜೂನ್ 14ರಿಂದ ಅನ್ ಲಾಕ್ ; ಮದುವೆ ಹೊರತುಪಡಿಸಿ ಇತರ ಯಾವುದೇ ಕಾರ್ಯಕ್ರಮ ಗಳನ್ನು ನಡೆಸುವಂತಿಲ್ಲ : ಜಿಲ್ಲಾಧಿಕಾರಿ – Vishwanews24
ಉಡುಪಿ : ಜೂನ್ 14ರಿಂದ ಅನ್ ಲಾಕ್ ; ಮದುವೆ ಹೊರತುಪಡಿಸಿ ಇತರ ಯಾವುದೇ ಕಾರ್ಯಕ್ರಮ ಗಳನ್ನು ನಡೆಸುವಂತಿಲ್ಲ : ಜಿಲ್ಲಾಧಿಕಾರಿ – Vishwanews24
ಉಡುಪಿ : ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗ ಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ನೀಡಿದರು. ಅವರು ಇಂದು ವಿಡಿಯೋ ಸಂವಾದದ ಮೂಲಕ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಗಳನ್ನು, ಎಲ್ಲಾ ಅಧಿಕಾರಿಗಳು ಮತ್ತು ಪಂಚಾಯತ್ ಗಳ ಸಹಕಾರದಿಂದ ಯಶಸ್ವಿಯಾಗಿ ಅನುಷ್ಠಾನ ಮಾಡಿದರ ಫಲವಾಗಿ ಜಿಲ್ಲೆಯಲ್ಲಿ ಸೋಂಕು ಹರಡುವುದು ಗಣನೀಯವಾಗಿ ಕಡಿಮೆಯಾಗಿದೆ, ಇದೇ ಕಾರಣದಿಂದ ಸರ್ಕಾರ ಜಿಲ್ಲೆಯಲ್ಲಿ ಅನ್ಲಾಕ್ ಘೋಷಣೆ ಮಾಡಿದ್ದು, ಈ ಕುರಿತಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಪಾಸಿಟಿವಿಟಿ ದರವನ್ನು ಸೊನ್ನೆಗೆ ಇಳಿಸಬೇಕು ಎಂದು ಹೇಳಿದರು .
ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಾರ್ಗಸೂಚಿಯಲ್ಲಿ ಅನುಮತಿಸಲಾದ ಚಟುವಟಿಕೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂಬ ಕುರಿತು ಖುದ್ದು ಪರಿಶೀಲಿಸಬೇಕು, ಮಾರ್ಗಸೂಚಿಯಲ್ಲಿ ಇಲ್ಲದ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ ಅಂತಹ ಅಂಗಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕ ಸಮಾರಂಭಗಳು, ಸನ್ಮಾನ ಕಾರ್ಯಕ್ರಮಗಳು ನಡೆಯದಂತೆ ಅಧಿಕಾರಿಗಳು ಗಮನ ಹರಿಸಬೇಕು ಕಾರ್ಯಕ್ರಮಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಆನ್ಲಾಕ್ ಅವಧಿಯಲ್ಲಿ ಮದುವೆಗಳಿಗೆ ಮಾತ್ರ ಅನುಮತಿ ನೀಡಿದ್ದು ,ಮದುವೆ ಹೊರತುಪಡಿಸಿ ಇತರ ಯಾವುದೇ ಕಾರ್ಯಕ್ರಮ ಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸಂವಾದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಕೋವಿಡ್ ನಿಯಂತ್ರಣಕ್ಕೆ ನಿಯೋಜಿಸಲಾದ ಫ್ಲೈಯಿಂಗ್ ಸ್ಕ್ವಾಡ್ ಗಳು ಭಾಗವಹಿಸಿದ್ದರು.
