ಉಡುಪಿ: ಭಾರತ್ ಜೋಡೊ ಯಾತ್ರೆ – ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ : ದೀಪಕ್ ಕೋಟ್ಯಾನ್ – Vishwanews24
ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ ಸಾಗಿದ್ದು, ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಅವರು ರಾಹುಲ್ ಅವರೊಂದಿಗೆ ಹೆಜ್ಜೆ ಹಾಕಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.ರಾಹುಲ್ ಗಾಂಧಿ ಜನಸಾಮಾನ್ಯರು ಹಾಗೂ ಅವರ ಸಮಸ್ಯೆ ಬಗ್ಗೆ ಹೆಚ್ಚು ಚಿಂತಿತರಾಗಿದ್ದು, ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟ, ಸಾಮಾಜಿಕ ಸಾಮರಸ್ಯದ ಬಗ್ಗೆ ಧ್ವನಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ, ರಾಜಕೀಯ ದ್ವೇಷದ ವಿಚಾರವಾಗಿ ಈ ಯಾತ್ರೆ ಮಾಡಲಾಗುತ್ತಿದೆ. ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ ಎಂದು ದೀಪಕ್ ಕೋಟ್ಯಾನ್ ಹೇಳಿದರು.
ನಿರೀಕ್ಷೆ ಮೀರಿ ಲಕ್ಷಾಂತರ ಜನ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಚ್ಚರಿಯ ವಿಷಯ ಎಂದರೆ, ರಾಹುಲ್ ಗಾಂಧಿ ಜೊತೆಗೆ ಜನ ಸಾಮಾನ್ಯರೂ ಕುಟುಂಬ ಸಮೇತವಾಗಿ ಮಕ್ಕಳಿಂದ ವೃದ್ಧರವರೆಗೂ ಉತ್ಸುಕತೆಯಿಂದ ಹೆಜ್ಜೆ ಹಾಕುತ್ತಿದ್ದಾರೆ. ಇದು ಯಾತ್ರೆಯನ್ನು ಜನ ಒಪ್ಪಿರುವುದಕ್ಕೆ ಸಾಕ್ಷಿ. ಪಾದಯಾತ್ರೆಯಲ್ಲಿ ಭಾಗವಹಿಸದವರು ಕೂಡ ಶುಭ ಕೋರಿ ಬೆಂಬಲಿಸುತ್ತಿದ್ದಾರೆ.
ಬಿಜೆಪಿಯವರು ಕ್ಷುಲ್ಲಕ ಕಾರಣಕ್ಕೆ ಟೀಕೆ ಮಾಡುತ್ತಿರುವುದು ರಾಹುಲ್ ಗಾಂಧಿಯವರ ಬಗ್ಗೆ ಬಿಜೆಪಿಯವರಿಗೆ ಇರುವ ಭಯದ ಕಾರಣದಿಂದ. ರಾಹುಲ್ ಅವರು ಯಾವ ಟಿ ಶರ್ಟ್, ಚಡ್ಡಿ ಹಾಕಿದರೆ ಬಿಜೆಪಿ ಅವರಿಗೆ ಸಮಸ್ಯೆ ಏನು? ಅವರು ಈ ಯಾತ್ರೆಗೆ ಅಡ್ಡಿ ಪಡಿಸಲು ಪ್ರಯತ್ನಿಸುತ್ತಿದ್ದು, ಈ ಯಾತ್ರೆ ಜನರ ಮನಸ್ಸಿನಲ್ಲಿ ಯಶಸ್ವಿಯಾಗಿ ಮುಟ್ಟಿದೆ. ದಿನೇ ದಿನೆ ಯಾತ್ರೆಯಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

