ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ
ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಬಗೆದ ದ್ರೋಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ವಿಶೇಷ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಈ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗಿದೆ. ಸ್ಥಳೀಯ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್ಒ) ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದು, ಈ ಇಡೀ ಪ್ರಕ್ರಿಯೆಯೇ ಕಾನೂನುಬಾಹಿರ ಮತ್ತು ನಿಯಮಬಾಹಿರವಾಗಿದೆ ಎಂದು ಸಚಿವರು ಕಿಡಿಕಾರಿದ್ದಾರೆ.
ಸ್ವತಂತ್ರವಾಗಿ ನಡೆಯಬೇಕಾದ ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ನೇರವಾಗಿ ಹಸ್ತಕ್ಷೇಪ ಮಾಡಿದೆ ಎಂದು ಜೋಶಿ ದೂರಿದ್ದಾರೆ. ಕೇವಲ ರಾಜಕೀಯ ಲಾಭಕ್ಕಾಗಿ, ಮತದಾರರ ಪಟ್ಟಿಯನ್ನು ತಮಗೆ ಅನುಕೂಲವಾಗುವಂತೆ ತಿರುಚಲು ಸರ್ಕಾರದ ಉನ್ನತ ಮಟ್ಟದಿಂದಲೇ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಪರಿಷ್ಕರಣೆಯು ರಾಜಕೀಯ ಪ್ರಭಾವದಿಂದ ಕೂಡಿದ್ದು, ಸ್ಥಳೀಯ ಆಡಳಿತದ ಮೇಲೆ ತೀವ್ರ ಒತ್ತಡ ಹೇರಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
