ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ : ಡಿ .ಕೆ ಶಿವಕುಮಾರ್ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ ಎಂದು ಜಲಸಂಪನ್ಮೂಲ ಸಚಿವ ಡಿ .ಕೆ ಶಿವಕುಮಾರ್ ಹೇಳಿದ್ದಾರೆ.

ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದಿರುವ ಡಿಕೆಶಿ, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ ಕದಲಿಲ್ಲ. ಹೋಟೆಲ್ ಒಳಗಡೆ ಬಿಡುವವರೆಗೂ ನಾನು ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

ಮುಂಬೈ ಬಿಟ್ಟು ಹೋಗಲ್ಲ, ನನ್ನನ್ನ ಬೇಕಾದರೆ ಬಂಧಿಸಲಿ ಎಂದಿದ್ದಾರೆ. ಜೊತೆಯಲ್ಲಿ ಸಚಿವ ಜಿ.ಟಿ. ದೇವೇಗೌಡ ಸೇರಿದಂತೆ ಜೆಡಿಎಸ್ ಶಾಸಕರು ಭಾಗಿಯಾಗಿದ್ದಾರೆ. ಇನ್ನೂ ಸ್ಥಳಕ್ಕೆ ಮುಂಬೈ ಕಾಂಗ್ರೆಸ್ ಮುಖಂಡರ ಆಗಮಿಸಿದ್ದಾರೆ. ಡಿಸಿಪಿ ಸಂಗ್ರಾಮಸಿಂಗ್ ಎಷ್ಟೇ ಮನವೊಲಿಸಿದರು ಪಟ್ಟು ಬಿಡದೆ ಡಿ. ಕೆ. ಶಿವಕುಮಾರ್ ಹೊಟೆಲ್ ಮುಂದೆಯೇ ನಿಂತಿದ್ದಾರೆ.

ಹೋಟೆಲ್ ಒಳಗಡೆ ಹೋಗಲು ಪೊಲೀಸರು ನಿರಾಕರಿಸುತ್ತಿದ್ದಂತೆಯೇ ಡಿಕೆಶಿ ಹಾಗೂ ಪೊಲೀಸರ ಮಧ್ಯೆ ಮಾತುಕತೆ ನಡೆದಿದೆ. ನಾವು ಒಂದೇ ಕುಟುಂಬದವರು. ನಮ್ಮ ಮಧ್ಯೆ ಸ್ವಲ್ಪ ಸಮಸ್ಯೆ ಆಗಿದೆ. ಅದನ್ನು ನಾವು ಸರಿಪಡಿಸಲು ಬಂದಿದ್ದೇವೆಯೋ ಹೊರತು, ಬೆದರಿಕೆ ಹಾಕಲು ಬಂದಿಲ್ಲ. ನಿನ್ನೆ ಬಿಜೆಪಿಯವರನ್ನು ಬಿಟ್ಟಿದ್ದೀರಿ, ಆದರೆ ಇವತ್ತು ನಮ್ಮವರನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸುವ ಮೂಲಕ ಸಚಿವರು ಮನವಿ ಮಾಡಿಕೊಂಡರೂ ಪೊಲೀಸರು  ಒಪ್ಪಿಲ್ಲ. ಹೀಗಾಗಿ ಇಬ್ಬರು ಮುಖಂಡರೊಂದಿಗೆ ಡಿಕೆಶಿ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ.

ಒಂದೆಡೆ ಅತೃಪ್ತರು ಡಿಕೆಶಿ ಭೇಟಿಗೆ ನಿರಾಕರಿಸಿದರೆ ಇತ್ತ ಸಚಿವರು ನಾನು ಶಾಸಕರನ್ನು ಭೇಟಿ ಮಾಡಿಯೇ ಬೆಂಗಳೂರಿಗೆ ವಾಪಸ್ಸಾಗುವುದು ಎಂಬ ಹಠಕ್ಕೆ ಬೀಳುವ ಮೂಲಕ ಮುಂಬೈನಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದೆ.