ಕರಾವಳಿಯಲ್ಲಿ ಮತ್ತೆ ಅಬ್ಬರಿಸಿದ ವರುಣ ; ಪ್ರವಾಹ ಪರಿಸ್ಥಿತಿಗೆ ತುತ್ತಾದ ಭಟ್ಕಳ – Vishwanews24
ಕರಾವಳಿಯಲ್ಲಿ ಮತ್ತೆ ಅಬ್ಬರಿಸಿದ ವರುಣ ; ಪ್ರವಾಹ ಪರಿಸ್ಥಿತಿಗೆ ತುತ್ತಾದ ಭಟ್ಕಳ
ಉತ್ತರ ಕನ್ನಡ: ರಾಜ್ಯದ ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸೋಮವಾರ ರಾತ್ರಿಯಿಂದ ಆರಂಭವಾದ ಮಳೆ ಈವರೆಗೂ ಬಿಡುವು ನೀಡಿಲ್ಲ. ಇದರಿಂದಾಗಿ ಮತ್ತೆ ಅನೇಕ ಗ್ರಾಮಗಳು ಮುಳುಗಡೆಯ ಹಂತ ತಲುಪಿವೆ.
ರಾತ್ರಿಯಿಂದ ಬೆಳಗ್ಗಿನವರೆಗೆ ಸುರಿದ ಮಳೆಗೆ ನಿರೀಕ್ಷೆಯೇ ಇರದಷ್ಟು ನೀರು ತುಂಬಿ ಪಟ್ಟಣ ಭಾಗದಲ್ಲೇ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಒಮ್ಮೆಲೆ ನಗರ ಭಾಗದಲ್ಲಿ ನೀರು ತುಂಬಲಾರಂಭಿಸಿದ್ದು, ಇದರಿಂದಾಗಿ ಜನ ಕಂಗಾಲಾಗಿದ್ದಾರೆ. ಬೆಳ್ಳಂಬೆಳಿಗ್ಗೆ ನಿದ್ದೆಯಿಂದ ಎದ್ದು ಕುಳಿತು ಸಾಮಾನು- ಸರಂಜಾಮುಗಳನ್ನ ರಕ್ಷಿಸಿಕೊಳ್ಳಲು ಪರದಾಡಿದರು.

ವೆಂಕಟಾಪುರ, ಚೌಥ್ನಿ, ಶರಾಬಿ ಹೊಳೆಗಳು ತುಂಬಿ ಹರಿದ ಪರಿಣಾಮ ಪಟ್ಟಣ ಭಾಗದ ಕೋಕ್ತಿ, ಆಸರಕೇರಿ, ಮೂಡಭಟ್ಕಳ, ಮುಟ್ಟಳ್ಳಿ, ಚೌಥ್ನಿ, ಮುಂಡಳ್ಳಿ ಭಾಗ ಸಂಪೂರ್ಣ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಶಂಸುದ್ದೀನ್ ಸರ್ಕಲ್, ರಂಗಿನಕಟ್ಟೆ, ಶಿರಾಲಿಯಲ್ಲಿ ಸೊಂಟದ ಮಟ್ಟ ನೀರು ನಿಂತು ವಾಹನಗಳು ಓಡಾಡದ ಪರಿಸ್ಥಿತಿ ಎದುರಾಗಿದೆ. ಭಟ್ಕಳದ ಶಂಸುದ್ದೀನ್ ವೃತ್ತದಿಂದ ಪೇಟೆಯ ಹೂವಿನ ಚೌಕದವರೆಗೆ ಭಾರಿ ನೀರು ನಿಂತಿದ್ದು, ಸಣ್ಣ-ಪುಟ್ಟ ವಾಹನಗಳು ಕೂಡ ತೇಲಿ ಹೋಗಿವೆ.
ಮುಂಜಾಗ್ರತಾ ಕ್ರಮವಾಗಿ ಭಟ್ಕಳದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ನೆರೆ ಉಂಟಾಗುವ ತಾಲೂಕು ಅಲ್ಲದಿದ್ದರೂ ಸಹ ಭಟ್ಕಳ ಇತಿಹಾಸದಲ್ಲಿ ಕಂಡು ಕೇಳರಿಯದ ಪ್ರವಾಹ ಪರಿಸ್ಥಿತಿಗೆ ಈ ಬಾರಿ ತುತ್ತಾದಂತಾಗಿದೆ. ಆಗಸ್ಟ್ 6ರವರೆಗೂ ಭಾರಿ ಮಳೆಯ ಮುನ್ಸೂಚನೆ ಕಾರಣ ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನತೆ ಎಚ್ಚರ ವಹಿಸಬೇಕಿದೆ.
ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಜಲಾವೃತದಲ್ಲಿ ಸಿಲುಕಿಕೊಂಡವರ ಸ್ಥಳಾಂತರಕ್ಕೆ ಪರದಾಡುವಂತಾಗಿದೆ.
ಆ. 3 ರಂದು ಸಿದ್ದರಾಮೋತ್ಸವ ಕಾರ್ಯಕ್ರಮ : ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ರಾಹುಲ್ ಗಾಂಧಿ – Vishwanews24
