ಕರಾವಳಿಯಲ್ಲಿ ಮಳೆಯ ಅಬ್ಬರ – ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24
ಕರಾವಳಿಯಲ್ಲಿ ಮಳೆಯ ಅಬ್ಬರ..
ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ..
ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ತಲುಪುವ ಸಾಧ್ಯತೆ..
ಮುಂದಿನ 24 ಗಂಟೆಗಳ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..
ಉಡುಪಿ / ದ. ಕ. : ಕಳೆದ ಕೆಲ ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಮುಂಜಾಗೃತಾ ಕ್ರಮವಾಗಿ ಇಂದಿನಿಂದ ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೆಲವೆಡೆ ಕೃತಕ ನೆರೆ ಉಂಟಾಗಿದ್ದು, ಮತ್ತೆ ಕೆಲವೆಡೆ ಹಳ್ಳಿಗಳು ಜಲಾವೃತಗೊಂಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ತಲುಪುವ ಸಾಧ್ಯತೆಯಿದ್ದು, ಮುಂಜಾಗೃತಾ ಕ್ರಮವಾಗಿ ಮುಂದಿನ 24 ಗಂಟೆಗಳ ವರೆಗೆ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ಭೇಟಿ ನೀಡದಂತೆ ಈಗಾಗಲೇ ಜಿಲ್ಲಾಡಳಿತ ಸೂಚಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ಮತ್ತು ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
