ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುವ ಬದಲು ಪ್ರವಾಹ ಪೀಡಿತ ಗ್ರಾಮಗಳನ್ನು ದತ್ತು ಪಡೆಯಲಿ : ಸಿ.ಟಿ.ರವಿ -Vishwanews24
ಬೆಂಗಳೂರು: ನೆರೆ ಸಂತ್ರಸ್ತರಿಗೆ ಪರಿಹಾರ ವಿಳಂಬ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರದ ಸಚಿವರಾದ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುವ ಬದಲು ಪ್ರವಾಹ ಪೀಡಿತ ಪ್ರದೇಶಗಳ 10 ಗ್ರಾಮಗಳನ್ನು ದತ್ತು ಪಡೆಯಲಿ ಎಂದು ತಿರುಗೇಟು ನೀಡಿದರು.
ರಾಜ್ಯ ಸರ್ಕಾರದ ಅಧಿಕಾರಿಗಳು ನೆರೆ ಪರಿಹಾರ ವಿಚಾರವಾಗಿಯೇ ದೆಹಲಿಗೆ ತೆರಳಿದ್ದು, ಶೀಘ್ರದಲ್ಲೇ ಪರಿಹಾರ ಧನ ಬಿಡುಗಡೆಯಾಗುತ್ತದೆ. ಪ್ರಧಾನಿ ಮೋದಿ ಅವರು ಎಂದೂ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಅಥವಾ ಪಕ್ಷಪಾತ ಮಾಡುವುದಿಲ್ಲ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನೆರೆ ಸಂತ್ರಸ್ತರಿಗೆ ತಲಾ 3,600 ರು. ಪರಿಹಾರ ನೀಡಲಾಗಿತ್ತು. ಈಗ ನಮ್ಮ ಸರ್ಕಾರ ತಲಾ 10 ಸಾವಿರ ರು. ಪರಿಹಾರ ನೀಡಿದ್ದೇವೆ ಎಂದರು.
