ಕಾಪು: ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಹಾಗೂ ವಿಪತ್ತು ನಿರ್ವಹಣಾ ವಿಷಯಗಳ ಕುರಿತು ಕಾಪು ತಾಲೂಕು ಮಟ್ಟದ ಸಭೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿಯಿಂದ ಉದ್ಯಾವರವರೆಗಿನ ಬೈಪಾಸ್ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಕಡೆಗಳಲ್ಲಿ ಬ್ಯಾರೀಕೇಡ್ಗಳನ್ನು ಅಳವಡಿಸಿದ್ದು ಸುಭದ್ರ ಸ್ಥಿತಿಯಲ್ಲಿ ಇರಿಸುವಂತೆ ಹಾಗೂ ಪ್ರತಿಫಲನಗಳನ್ನು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ಕಾಣುವಂತೆ ಅಳವಡಿಸುವಂತೆ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು. ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಹಾಕಿದ್ದು ಮಳೆಯಿಂದ ಮಣ್ಣು ಒದ್ದೆಯಾಗಿ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಮನೆಗಳಿಗೆ ಹಾನಿಯುಂಟಾದ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ/ ಪಂಚಾಯತ್ರಾಜ್ ಅಧಿಕಾರಿಗಳು ಸಮನ್ವಯತೆಯಿಂದ ಸ್ಥಳ ಪರಿಶೀಲನೆ ನಡೆಸಿ ಗರಿಷ್ಠ ಪರಿಹಾರ ನೀಡಬೇಕು. ರಸ್ತೆ ಬದಿಗಳಲ್ಲಿರುವ ಹಳೆ ವಿದ್ಯುತ್ ತಂತಿಗಳನ್ನು ಮತ್ತು ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಜಲ್ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಪೈಪ್ ಲೈನ್ ಅಳವಡಿಸಲು ತೆಗೆದ ಹೊಂಡ ಗುಂಡಿಗಳನ್ನು ಸರಿಯಾಗಿ ಮಚ್ಚದ ಕಾರಣ ಅಪಘಾತ ಸಂಭವಿಸುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಶಾಲಾ ಕಾಲೇಜುಗಳು ಆರಂಭವಾಗಲಿದ್ದು ವಿದ್ಯಾರ್ಥಿಗಳಿಗೆ ಜಾತಿ ಆದಾಯ ಪ್ರಮಾಣ ಪತ್ರ ಅಗತ್ಯವಾಗಿದ್ದು, ಜಾತಿ ಆದಾಯ ಪ್ರಮಾಣ ಪತ್ರ ನೀಡಲು ವಿಳಂಬ ಮಾಡದಂತೆ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಗಾಲದಲ್ಲಿ ಮಲೇರಿಯಾ, ಡೆಂಗ್ಯೂ, ಅತಿಸಾರ ಮುಂತಾದ ಸಾಂಕ್ರಾಮಿಕ ರೋಗಗಳ ಹರಡುವಿಕೆ ಉಲ್ಬಣವಾಗಲಿದ್ದು ಇದರ ತಡೆಗೆ ಮುಂಜಾಗ್ರತ ಕ್ರಮ ಹಾಗೂ ಸಾರ್ವಜನಿಕರಿಗೆ ಜಾಗೃತಿ ಉಂಟು ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛ ಪರಿಸರ ಹಿತದೃಷ್ಟಿಯಿಂದ ಮಲೀನ ನೀರು ಮತ್ತು ಮಲೀನ ತ್ಯಾಜ್ಯಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮತ್ತು ಮಳೆಗಾಲದ ಸಂದರ್ಭದಲ್ಲಿ ಪುರಸಭೆಯಲ್ಲಿ ತುರ್ತು ಸೇವಾ ಕೇಂದ್ರ ತೆರೆದು ಜವಾಬ್ದಾರಿಯುತ ಸಿಬ್ಬಂದಿಗಳನ್ನು ನೇಮಕ ಮಾಡಿ ಅರ್ಜಿಗಳನ್ನು ಸ್ವೀಕರಿಸಿ ತುರ್ತು ಪರಿಹಾರೋಪಾಯ ಕೈಗೊಳ್ಳಬೇಕು ಎಂದು ಶಾಸಕರು ತಿಳಿಸಿದರು.
ರಾಷ್ಟೀಯ ಹೆದ್ದಾರಿಯ ಅಪಘಾತ ವಲಯದಲ್ಲಿ ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಬ್ಯಾರಿಗೇಟ್ಗಳನ್ನು ಅಳವಡಿ ಸಂಭಾವ್ಯ ಅಪಘಾತ ತಡೆಯಲು ಕ್ರಮ ವಹಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು. ಕಡಲ್ಕೊರೆತ ಭಾದಿತ ಪ್ರದೇಶಗಳ ಕಡಲ್ಕೊರೆತ ತಡೆಗೆ ಯೋಜನೆ ಸಿದ್ಧಪಡಿಸುವಂತೆ ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ ಕಿಂಡಿ ಅಣೆಕಟ್ಟುಗಳಗೆ ಅಳವಡಿಸಲಾದ ಹಲಗೆಗಳನ್ನು ನೀರಿನ ಮಟ್ಟಕ್ಕೆ ಅನುಗುಣವಾಗಿ ತೆರವು ಗೊಳಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಗಾಲದ ಸಂದರ್ಭದಲ್ಲಿ ಅವಘಡ ಸಂಭವಿಸಿದರೆ ತುರ್ತು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಲು ಅವಶ್ಯಕತೆ ಇರುವ ಪೂರಕ ಸಲಕರಣೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಶಾಸಕರು ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಪ್ರತೀಭಾ ಆರ್., ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ತಾಪಂ ಕಾರ್ಯನಿರ್ವ ಹಣಾಧಿಕಾರಿ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಕಾಪು ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…