ಕಾರ್ಕಳ: ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಮಾಡಿದ ಲೂಟಿ- ಭ್ರಷ್ಟಾಚಾರ ಬೆಳಕಿಗೆ ತರುವ ಕೆಲಸ ನಾವು ಮಾಡುತಿದ್ದೇವೆ : ವಿನಯ ಕುಮಾರ್ ಸೊರಕೆ – Vishwanews24
ಕಾರ್ಕಳ: ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಮಾಡಿದ ಲೂಟಿ- ಭ್ರಷ್ಟಾಚಾರ ಬೆಳಕಿಗೆ ತರುವ ಕೆಲಸ ನಾವು ಮಾಡುತಿದ್ದೇವೆ : ವಿನಯ ಕುಮಾರ್ ಸೊರಕೆ
ಕಾರ್ಕಳ: ಹಿಂದಿನ ಬಿಜೆಪಿ ಆಡಳಿತದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಸೇರಿದಂತೆ ಪಕ್ಷೀಯರು ನಡೆಸಿದ ಕೋಟ್ಯಾಂತರ ರೂ.ಗಳ ಕರ್ಮಕಾಂಡಗಳನ್ನು ಬಹಿರಂಗಪಡಿಸುವ ಹಾಗೂ ಈ ವಿಷಯಗಳ ಬಗ್ಗೆ ಜನತೆಗೆ ತಿಳಿಸುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ನಿರ್ಮಿತಿ ಕೇಂದ್ರವು ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪಿಸುವುದಾಗಿ ನಂಬಿಸಿ ಫೈಬರ್ ಪ್ರತಿಮೆ ಸ್ಥಾಪಿಸುವ ಮೂಲಕ ಜನತೆಗೆ ‘ನಂಬಿಕೆ ದ್ರೋಹ’ ಎಸಗಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ನ ಸಹಯೋಗದಲ್ಲಿ ಸೋಮವಾರ ಕಾರ್ಕಳ ತಾಲೂಕು ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಹಿಂದುತ್ವದ ಹೆಸರಿನಲ್ಲಿ ಅವರು ಮಾಡಿದ ಲೂಟಿ- ಭ್ರಷ್ಟಾಚಾರವನ್ನು ಬೆಳಕಿಗೆ ತರುವ ಕೆಲಸವನ್ನು ನಾವು ಮಾಡುತಿದ್ದೇವೆ. ಬ್ರಹ್ಮಾವರದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಬಿಜೆಪಿ ನಾಯಕನ ನೇತೃತ್ವದ ಆಡಳಿತ ಮಂಡಳಿ 15 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆಸಿದರೆ, ಇಲ್ಲಿ ಉಮಿಕಲ್ ಬೆಟ್ಟದ ತುದಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮನ ಕಂಚಿನ ಮೂರ್ತಿ ಸ್ಥಾಪನೆ ಹೆಸರಿನಲ್ಲಿ ಶಾಸಕರು ಮಾಡಿ ಮಹಾವಂಚನೆ ಯನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡುತಿದ್ದೇವೆ ಎಂದು ಸೊರಕೆ ಹೇಳಿದರು.
ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ – Vishwanews24
ಶಾಸಕರು ಚುನಾವಣೆ ಗೆಲ್ಲಲು ಮತದಾರರ ಧಾರ್ಮಿಕ ಭಾವನೆ, ಭಕ್ತಿ, ನಂಬಿಕೆಗೆ ಧಕ್ಕೆ ತರುವ ಕೆಲ ಮಾಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ನಲ್ಲಿ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ. ಈ ಬಗ್ಗೆ ಸರಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕು ಎಂದರು.
ಧರ್ಮ, ನಂಬಿಕೆಯನ್ನು ಘಾಸಿಗೊಳಿಸಿದ ಅಧಿಕಾರಿಗಳ ವಿರುದ್ಧ ಸಹ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ ಸೊರಕೆ, ಈ ಯೋಜನೆಯಲ್ಲಿ ಅವ್ಯವಹಾರ ನಡೆಸಲು ಸಾಥ್ ನೀಡಿದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಈಗಾಗಲೇ ಮುಖ್ಯಮಂತ್ರಿಗಳಿ ಗೆ ಮನವಿ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಡಾ. ಅಂಶುಮನ್, ಕಾಂಗ್ರೆಸ್ ಮುಖಂಡರಾದ ವಿಕಾಸ್ ಹೆಗ್ಡೆ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ರಾಜ್ ಕಾಂಚನ್, ಡಿ.ಆರ್ ರಾಜು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಚಂದ್ರಶೇಖರ ಬಾಯರಿ, ಸದಾಶಿವ ದೇವಾಡಿಗ, ದೀಪಕ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ನಾಯಕಿ ಅನಿತಾ ಡಿಸೋಜ ಉಪಸ್ಥಿತರಿದ್ದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಸ್ವಾಗತಿಸಿದರೆ, ಶುಭದ ರಾವ್ ಕಾರ್ಯಕ್ರಮ ನಿರೂಪಿಸಿದರು.
