‘ಕೈ’ ಬಿಟ್ಟು ‘ಕಮಲ’ ಹಿಡಿದ ಮಾಜಿ ಶಾಸಕ ಎ ಮಂಜು : ರಂಗೇರಿತು ಹಾಸನ ಲೋಕಸಭೆ ಚುನಾವಣೆ – Vishwanews24

Featured, ರಾಜ್ಯ ನ್ಯೂಸ್

ಹಾಸನ: ಲೋಕಸಭಾ ಚುನಾವಣೆಹೊಸ್ತಿಲಲ್ಲಿ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿ ಸಾಗುತ್ತಿದೆ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ ಕಾಂಗ್ರೆಸ್‌ನ ಎ. ಮಂಜು.

ಹಾಸನದಲ್ಲಿ ಬಿಜೆಪಿಗೆ ಈಗ ಬಲ ಬಂದಂತಾಗಿದೆ. ಕಾಂಗ್ರೆಸ್‌ನ ಎ. ಮಂಜು ಈಗ ಕಮಲ ಕೈಯಲ್ಲಿ ಹಿಡಿದಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರಕ್ಕೆ ಎ. ಮಂಜು ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿವೆ.

ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಮೈತ್ರಿ ಧರ್ಮದ ಅಭ್ಯರ್ಥಿಯಾಗಿ ದೇವೇಗೌಡರೇ ಹಾಸನದಲ್ಲಿ ಸ್ಪರ್ಧೆ ಮಾಡಬೇಕು ಇಲ್ಲವಾದರೆ ನಮ್ಮ ಬೆಂಬಲ ಇರುವುದಿಲ್ಲ ಎನ್ನುತ್ತಿದ್ದ ಮಾಜಿ ಸಚಿವ ಎ.ಮಂಜು ಅವರು ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಿನ್ನೆ ಸಂಜೆ ವೇಳೆಗೆ ದಿಢೀರ್ ಎಂದು ಹಾಸನದ ಆರ್ ಪುರಂ ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಎ.ಮಂಜು ಅವರು, ತರಾತುರಿಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾದರು.

ಹಾಸನ ಶಾಸಕ ಪ್ರೀತಂ ಗೌಡ ಅವರು ಮಂಜು ಅವರಿಗೆ ಬಿಜೆಪಿ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತ ನೀಡಿದರು. ಇಂದು ರಾಜ್ಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಮಂಜು ಅವರ ಸೇರ್ಪಡೆ ಬಗ್ಗೆ ಘೋಷಣೆಯಾಗಲಿದೆ. ಇದರೊಂದಿಗೆ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿಯಿಂದ ಎ.ಮಂಜು ಅವರು ಸ್ಪರ್ಧೆ ಮಾಡುವುದು ಖಚಿತವಾಗಿದೆ. ಅಲ್ಲದೇ ಪಕ್ಷದಿಂದ ಟಿಕೆಟ್ ಸಿಗುವುದು ಖಚಿತ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭಿಸಿದೆ. ಟಿಕೆಟ್ ಸಿಗುವ ಭರವಸೆ ಮೇರೆಗೇ ಮಂಜು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದೂ ಹೇಳಲಾಗುತ್ತಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜು, ಬಿಜೆಪಿ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಇನ್ನು ಹಾಸನದಲ್ಲಿ ಕಮಲ ಅರಳಿಸುವುದಕ್ಕೆ ಒತ್ತು ನೀಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಇದೇ ರೀತಿ ಮುಂದುವರಿದರೆ ಅವುಗಳಿಗೆ ಮಾರಕವಾಗಲಿದೆ. ಬಿಜೆಪಿಗೆ ಲಾಭವಾಗಲಿದೆ ಎಂದು ಮಂಜು ಭವಿಷ್ಯ ನುಡಿದಿದ್ದಾರೆ.