ಕೊರೊನಾ ಇಡೀ ಜಗತ್ತಿಗೆ ಮಾರಕವಾಗಿದ್ದರೆ, ಬಿಜೆಪಿ ಪಾಲಿಗೆ ಕಾಮಧೇನು : ಎಂ.ಬಿ.ಪಾಟೀಲ -Vishwanews24

Featured, ರಾಜ್ಯ ನ್ಯೂಸ್

ಹಾವೇರಿ: ‘ಕೊರೊನಾ ಎಂಬುದು ಇಡೀ ಜಗತ್ತಿಗೆ ಮಾರಕವಾಗಿದ್ದರೆ, ಬಿಜೆಪಿ ಪಾಲಿಗೆ ಕಾಮಧೇನು, ಕಲ್ಪವೃಕ್ಷವಾಗಿದೆ. ಕೋವಿಡ್‌ ಉಪಕರಣಗಳ ಖರೀದಿಯಲ್ಲಿ ಸಚಿವರು, ಅಧಿಕಾರಿಗಳು ಲೂಟಿ ಹೊಡೆಯುವ ಮೂಲಕ ಕೊರೊನಾ ನಿರ್ವಹಣೆಯನ್ನು ಜಾತ್ರೆ, ಹಬ್ಬವನ್ನಾಗಿ ಮಾಡಿಕೊಂಡಿದ್ದಾರೆ’ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರ ಆರೋಪ ಮಾಡಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸರ್ಕಾರದ ವಿವಿಧ ಇಲಾಖೆಗಳು ಖರ್ಚು ಮಾಡಿರುವ ₹4 ಸಾವಿರ ಕೋಟಿಯಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಸಚಿವರು ಮತ್ತು ಅಧಿಕಾರಿಗಳು ಜೇಬಿಗಿಳಿಸಿದ್ದಾರೆ. ತಮಿಳುನಾಡು ಸರ್ಕಾರ ತಲಾ ವೆಂಟಿಲೇಟರ್‌ಗೆ ₹4.78 ಲಕ್ಷ ಕೊಟ್ಟು ಖರೀದಿಸಿದೆ. ಆದರೆ, ರಾಜ್ಯ ಸರ್ಕಾರ ₹5.6 ಲಕ್ಷದಿಂದ ₹18.20 ಲಕ್ಷಗಳವರೆಗೆ ದುಬಾರಿ ಹಣ ಕೊಟ್ಟು ಖರೀದಿಸಿದೆ. ಅಷ್ಟೇ ಅಲ್ಲ, ವೆಂಟಿಲೇಟರ್‌ಗಳು ಕಳಪೆ ಗುಣಮುಟ್ಟದಿಂದ ಕೂಡಿವೆ ಎಂದು ಟೀಕಿಸಿದರು.

ಕೋವಿಡ್‌ ನಿಯಂತ್ರಣದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿವೆ. ರಾಜ್ಯದಲ್ಲಿ ಮಾರ್ಚ್‌ 9ರಂದು ಕೇವಲ ಒಂದು ಸೋಂಕು ಪ್ರಕರಣ ಇದ್ದದ್ದು, ಈಗ ಒಂದು ಲಕ್ಷ ಮೀರಿದೆ. ಆಂಬುಲೆನ್ಸ್‌ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಕಾಡುತ್ತಿದೆ. ‘ಆತ್ಮನಿರ್ಭರ’ ಪ್ಯಾಕೇಜ್‌ನಲ್ಲಿ ಘೋಷಿಸಿದ ಪರಿಹಾರ ಹಣ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಲ್ಲ. ದೇಶದಲ್ಲಿ ವೆಂಟಿಲೇಟರ್‌ ಕೊರತೆ ಇದ್ದರೂ, ಬೇರೆ ದೇಶಗಳಿಗೆ ರಫ್ತು ಮಾಡಲು ಪ್ರಧಾನಿ ಮೋದಿ ಅನುಮತಿ ನೀಡಿದ್ದಾರೆ ಎಂದು ಕುಟುಕಿದರು.

ಪತ್ರಿಕಾಗೋಷ್ಠಿಯಲ್ಲಿ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್‌, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಮನೋಹರ ತಹಸೀಲ್ದಾರ್‌, ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಶಾಸಕರಾದ ಬಿ.ಎಚ್‌.ಬನ್ನಿಕೋಡ, ಬಿ.ಆರ್‌.ಪಾಟೀಲ, ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ಜಿ.ಪಂ.ಅಧ್ಯಕ್ಷ ಬಸನಗೌಡ ದೇಸಾಯಿ, ಜಿ.ಪಂ.ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ ಇತರರು ಇದ್ದರು.