ಕೋಮುಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ ಅಂಥಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಬಿಎಸ್ ವೈ ಸೂಚನೆ -Vishwanews24
ಬೆಂಗಳೂರು: ರಾಜ್ಯದಲ್ಲಿ ಅಮಾಯಕ ಜನರನ್ನು ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಸೂಚನೆ ನೀಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಅಮಾಯಕ ಜನರನ್ನು ವಂಚಿಸುವ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಬಗ್ಗೆ ಇಡೀ ಜಗತ್ತು ಗಮನಹರಿಸುತ್ತಿದೆ. ನಗರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಬೇಕು. ಆಧುನಿಕ ತಂತ್ರಜ್ಞಾನ ಬಳಸಿ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆಗಳ ವರಗೆ ಗಸ್ತು ತಿರುಗುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಶಂಕಿತ ಭಯೋತ್ಪಾದಕರು ಆಶ್ರಯ ಪಡೆದಿರುವ ಬಗ್ಗೆ ಇದೇ ವೇಳೆ ಪ್ರಸ್ತಾಪಿಸಿರುವ ಅವರು, ಭಯೋತ್ಪಾದಕರ ಬಗ್ಗೆ ಎಚ್ಚರವಹಿಸಿ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಕೋಮುಗಲಭೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಕೋಮುಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ ಅಂಥಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.
